LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಮುದ್ದೇಬಿಹಾಳ–ತಾಳಿಕೋಟಿ ತಾಲೂಕುಗಳನ್ನು ಬರ ಪಟ್ಟಿಯಿಂದ ಕೈಬಿಡುವ ಪ್ರಶ್ನೆಯೇ ಇಲ್ಲ: ಶಾಸಕ ನಾಡಗೌಡ

ಮುದ್ದೇಬಿಹಾಳ: ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕುಗಳನ್ನು ಯಾವುದೇ ಕಾರಣಕ್ಕೂ ಬರ ಪಟ್ಟಿಯಿಂದ ಕೈಬಿಡುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಭರವಸೆ ನೀಡಿದ್ದು, ಈ ವಾರದೊಳಗೆ ಎರಡೂ ತಾಲೂಕುಗಳು ಬರ ಪಟ್ಟಿಗೆ ಸೇರ್ಪಡೆಯಾಗಲಿವೆ. ಈ ಕುರಿತು ರೈತರು ಯಾವುದೇ ಆತಂಕಪಡಬೇಕಿಲ್ಲ ಎಂದು ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರೈತರು ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ತಾನೂ ರೈತ ಕುಟುಂಬದಿಂದ ಬಂದವನಾಗಿದ್ದು, ರೈತರ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿದೆ ಎಂದರು.
ಬಿಜೆಪಿ ನಾಯಕರು ಹಸಿರು ಶಾಲು ಧರಿಸಿ ಹೋರಾಟ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕೇವಲ ಹೇಳಿಕೆ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ. ರೈತರಿಗೆ ನಿಜವಾದ ನ್ಯಾಯ ಒದಗಿಸಬೇಕಾದರೆ ಮೊದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ರೈತರ ಪರವಾಗಿ ನಿಲ್ಲಬೇಕು. ನಾವು ಯಾರ ಬಗ್ಗೆಯೂ ಹೇಳಿಕೆ ನೀಡುತ್ತ ಕಾಲಹರಣ ಮಾಡುವ ಬದಲು ನಮ್ಮ ಮತಕ್ಷೇತ್ರದ ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದು ಹೇಳಿದರು.
ಹಿಂಗಾರು ಬೆಳೆಗಳಿಗೆ ನೀರಿನ ಕೊರತೆ ಆತಂಕ: ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಾದರೆ ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗುವುದಿಲ್ಲ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಅಂತಹ ಪರಿಸ್ಥಿತಿ ಎದುರಾದರೆ ಕುಡಿಯುವ ನೀರಿಗೆ ಮಾತ್ರ ಆದ್ಯತೆ ನೀಡಿ ನೀರು ಬಿಡುಗಡೆ ಮಾಡಲಾಗುವುದು ಎಂದು ನಾಡಗೌಡ ತಿಳಿಸಿದರು.
ಮುದ್ದೇಬಿಹಾಳ ತಾಲೂಕಿನಲ್ಲಿ ಸುಮಾರು 3,250 ಹೆಕ್ಟೇರ್ ನೀರಾವರಿ ಪ್ರದೇಶ ಹಾಗೂ 2,050 ಹೆಕ್ಟೇರ್ ಖುಷ್ಕಿ ಪ್ರದೇಶವಿದ್ದು, ಸದ್ಯ ತೇವಾಂಶದ ಕೊರತೆ ಕಂಡುಬರುತ್ತಿದೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.
ಪಿಡಿಒಗಳಿಗೆ ಶಾಸಕ ನಾಡಗೌಡ ಎಚ್ಚರಿಕೆ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಇದೇ ರೀತಿ ಮುಂದುವರಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿ.ಎಸ್. ಅವರಿಗೆ ಸೂಚಿಸಲಾಗುವುದು ಎಂದು ನಾಡಗೌಡ ಎಚ್ಚರಿಸಿದರು.
ಕ್ಷೇತ್ರದ ಗ್ರಾಮಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ಪಿಡಿಒಗಳಿಗೆ ಸೂಚಿಸಿದ ಅವರು, ಮಹಿಳಾ ಪಿಡಿಒಗಳು ಕರ್ತವ್ಯ ನಿರ್ವಹಿಸುವ ಸಂದರ್ಭ ಅಗತ್ಯವಿದ್ದರೆ ಪೊಲೀಸರ ಸಹಾಯ ಪಡೆದು ಯಾವುದೇ ಒತ್ತಡಕ್ಕೆ ಒಳಗಾಗದೆ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಗಂಭೀರವಾಗಿ ಆಲಿಸಿ, ಅವರೊಂದಿಗೆ ಸಮರ್ಪಕವಾಗಿ ಸಂವಹನ ನಡೆಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕು ಎಂದರು.
ಜೆಜೆಎಂ ಕಾಮಗಾರಿ ಕುರಿತು ಅಸಮಾಧಾನ: ಕೃಷ್ಣಾ ನದಿ ಪಕ್ಕದಲ್ಲೇ ಇದ್ದರೂ ಜನರಿಗೆ ನದಿ ನೀರು ಸುಲಭವಾಗಿ ಲಭ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ನದಿ ನೀರು ಇದ್ದರೂ ಶುದ್ಧ ಹಾಗೂ ಸಮರ್ಪಕ ಕುಡಿಯುವ ನೀರು ಪಡೆಯಲು ಸಾಧ್ಯವಾಗದಿರುವುದು ವಿಷಾದಕರ ಸಂಗತಿ ಎಂದರು.
ಜಲ ಜೀವನ್ ಮಿಷನ್ ಕಾಮಗಾರಿಗಳಲ್ಲಿ ಸಮಸ್ಯೆ ಇರುವ ಕಡೆ ತಕ್ಷಣ ಕ್ರಮ ಕೈಗೊಳ್ಳುವಂತೆ ಹಲವು ಬಾರಿ ಸೂಚಿಸಿದ್ದೇನೆ. ಕೆಲವು ಕಡೆ ರಾಜಕೀಯ ಕಾರಣಗಳಿಂದ ಹಾಗೂ ಇನ್ನೂ ಕೆಲವು ಕಡೆ ಸಾರ್ವಜನಿಕರ ಸಮಸ್ಯೆಗಳಿಂದ ಕಾಮಗಾರಿ ಪೂರ್ಣಗೊಳಿಸಲು ಅಡಚಣೆ ಉಂಟಾಗಿದೆ. ರಾಜ್ಯಾದ್ಯಂತ ಜೆಜೆಎಂ ಕಾಮಗಾರಿ ಕುರಿತು ಜನರಲ್ಲಿ ಅಸಮಾಧಾನವಿದ್ದು, ಕಾಮಗಾರಿ ಕಳಪೆ ನಡೆಸಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬಸರಕೋಡಿನಿಂದ ಢವಳಗಿ ಸೇರಿದಂತೆ ಸುಮಾರು 22 ಗ್ರಾಮಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಬಿದರಕುಂದಿ ಗ್ರಾಮದಲ್ಲಿಯೂ ಕುಡಿಯುವ ನೀರು ಸರಿಯಾಗಿ ದೊರೆಯುತ್ತಿಲ್ಲ ಎಂಬ ದೂರುಗಳಿವೆ. ಈ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು.
ನೀರಿನ ಪೋಲು ತಡೆಗೆ ಕ್ರಮ: ನೀರನ್ನು ಮಿತವಾಗಿ ಬಳಕೆ ಮಾಡದಿರುವುದರಿಂದ ಹೆಚ್ಚುವರಿ ನೀರು ಹರಿದುಹೋಗಿ ವ್ಯರ್ಥವಾಗುತ್ತಿದೆ. ಇದನ್ನು ತಡೆಯಲು ಗ್ರಾಮ ಪಂಚಾಯಿತಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೆರೆಗಳಿಗೆ ತುಂಬಿಸುವ ನೀರನ್ನು ಸಾಧ್ಯವಾದಷ್ಟು ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.
ಎಲ್ಲ ಡೆಪ್ಯುಟೇಷನ್‌ಗಳನ್ನು ರದ್ದುಪಡಿಸಿ, ಮೂಲ ಇಲಾಖೆಗಳಲ್ಲಿಯೇ ಸಿಬ್ಬಂದಿ ಕರ್ತವ್ಯ ನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ತೋಟಗಾರಿಕೆ ಬೆಳೆಗಳ ಮಾಹಿತಿ: ತೋಟಗಾರಿಕೆ ಇಲಾಖೆಯ ಮಾಹಿತಿಯಂತೆ, ಪ್ರಸಕ್ತ ಸಾಲಿನಲ್ಲಿ 1,008 ಹೆಕ್ಟೇರ್ ವಾರ್ಷಿಕ ಗುರಿ ನಿಗದಿಪಡಿಸಲಾಗಿದ್ದು, ಇದುವರೆಗೆ 658 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಮೆಣಸಿನಕಾಯಿ ಬೆಳೆ ಸುಮಾರು 147 ಹೆಕ್ಟೇರ್ ಪ್ರದೇಶದಲ್ಲಿದ್ದು, ತಾಳಿಕೋಟಿ ಭಾಗದಲ್ಲಿ 110 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದೆ. ನಾಲತವಾಡ ಭಾಗದಲ್ಲಿ ಸುಮಾರು 30 ಎಕರೆ ಪ್ರದೇಶದಲ್ಲಿ ದಾಳಿಂಬೆ ಬೆಳೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
25 ವಾರಗಳಿಗೆ ಮೇವಿನ ಕೊರತೆ ಇಲ್ಲ: ಪಶುಪಾಲನಾ ಇಲಾಖೆಯ ಮಾಹಿತಿಯಂತೆ, ತಾಲೂಕಿನಲ್ಲಿ ಮೆಕ್ಕೆಜೋಳ, ತೊಗರಿ ಹಾಗೂ ಕಬ್ಬು ಬೆಳೆಗಳ ಲಭ್ಯತೆಯಿದ್ದು, ಸದ್ಯ ಸುಮಾರು 25 ವಾರಗಳವರೆಗೆ ಮೇವಿನ ಕೊರತೆ ಎದುರಾಗುವುದಿಲ್ಲ ಎಂದು ತಿಳಿಸಲಾಯಿತು.
ಶಾಲೆಗಳಿಗೆ ಶುದ್ಧ ಕುಡಿಯುವ ನೀರು ಕಡ್ಡಾಯ: ಗ್ರಾಮೀಣ ಭಾಗದ ಶಾಲೆಗಳಿಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು ಆಯಾ ಗ್ರಾಮ ಪಂಚಾಯಿತಿಗಳ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಪಂಚಾಯಿತಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಶಾಲಾ ಮಕ್ಕಳಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಸೂಚಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್