ಬಳ್ಳಾರಿ, ಏ.21: ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ವತಿಯಿಂದ ನಗರದಲ್ಲಿ ಭಾರೀ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಯಿತು.
ನಗರದ ಜಿಲ್ಲಾ ಜೆಡಿಎಸ್ ಕಚೇರಿಯಿಂದ ಗಡಿಗಿ ಚೆನ್ನಪ್ಪ ವೃತ್ತದವರೆಗೆ ನಡೆದ ಈ ರ್ಯಾಲಿಯಲ್ಲಿ, ಜೆಡಿಎಸ್ ಮಹಿಳಾ ಜಿಲ್ಲಾಧ್ಯಕ್ಷೆ ಪುಷ್ಪ ಅವರ ನೇತೃತ್ವದಲ್ಲಿ ಜಮೀಲಾ, ಶಬಾನ ಸೇರಿದಂತೆ ಅನೇಕ ಮಹಿಳಾ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದರು. ಪ್ರತಿಭಟನಾಕಾರರು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನವನ್ನು ಹೊರಹಾಕಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಪುಷ್ಪ ಅವರು, “ಮಹಿಳೆಯರಿಗೆ ಶೇ.33ರಷ್ಟು ರಾಜಕೀಯ ಮೀಸಲಾತಿ ನೀಡುವುದು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಅನುಗುಣವಾಗಿದೆ. ಈ ಮಸೂದೆ ಮಹಿಳೆಯರ ಹಕ್ಕುಗಳ ರಕ್ಷಣೆಗೆ ಅತ್ಯಗತ್ಯ. ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುವುದು ಮಹಿಳೆಯರ ಆಶಯಗಳನ್ನು ಕುಂಠಿತಗೊಳಿಸುವಂತಾಗಿದೆ,” ಎಂದು ಕಿಡಿಕಾರಿದರು.
“ಇಂದಿನ ಸಮಾಜದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವಾಗ, ರಾಜಕೀಯದಲ್ಲಿಯೂ ಸಮಾನ ಅವಕಾಶ ಕಲ್ಪಿಸಬೇಕು. ಜೆಡಿಎಸ್ ಪಕ್ಷ ಸದಾ ಮಹಿಳಾ ಸಬಲೀಕರಣಕ್ಕೆ ಬದ್ಧವಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಅವಧಿಯಲ್ಲಿಯೇ ಮಹಿಳಾ ಮೀಸಲಾತಿಗೆ ಆದ್ಯತೆ ನೀಡಲಾಗಿತ್ತು,” ಎಂದು ಅವರು ಹೇಳಿದರು.
ಇದೇ ವೇಳೆ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರು, “ಕಾಂಗ್ರೆಸ್ ಮಹಿಳೆಯರ ರಾಜಕೀಯ ಹಕ್ಕುಗಳನ್ನು ಕಸಿದುಕೊಳ್ಳಲು ಯತ್ನಿಸುತ್ತಿದೆ. ಕೇಂದ್ರ ಸರ್ಕಾರ ತಕ್ಷಣವೇ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರಬೇಕು. ಕಾಂಗ್ರೆಸ್ ತನ್ನ ನಿಲುವು ಪರಿಷ್ಕರಿಸಿ ಮಹಿಳೆಯರ ಪರವಾಗಿ ನಿಲ್ಲಬೇಕು,” ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವಿಜಯ, ರೆಹಮತ್, ರಾಜೇಶ್ವರಿ, ಮಮತಾ, ಶಿವಗಂಗಾ, ಶಿರೀಷಾ ಸೇರಿದಂತೆ ಅನೇಕ ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು. ನಗರ ಘಟಕದ ಅಧ್ಯಕ್ಷ ಹೊನ್ನೂರು ಸ್ವಾಮಿ (ವಂಡ್ರಿ), ಕಂಪ್ಲಿ ಅಧ್ಯಕ್ಷ ಮೇಘರಾಜ್, ಶಿವು ನಾರಾಯಣ, ವಸಂತ್ ಕುಮಾರ್, ಮುತ್ತು, ಜಾವೀದ್, ಹೊನ್ನೂರು ಅಲಿ ಸೇರಿದಂತೆ ವಿವಿಧ ಮುಖಂಡರು ಹಾಗೂ ತಾಲ್ಲೂಕು ಮಟ್ಟದ ಪದಾಧಿಕಾರಿಗಳು ಸಹ ಉಪಸ್ಥಿತರಿದ್ದರು.