ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ
ಬಳ್ಳಾರಿ:03: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಯೋಗದಲ್ಲಿ, ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ವಾಸವಿ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗಾಗಿ ವಿಶೇಷ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ಈ ವರ್ಷದ ಸ್ಪರ್ಧೆಯ ವಿಷಯ "ನಮ್ಮ ಭವಿಷ್ಯಕ್ಕಾಗಿ ಪ್ರಕೃತಿಯಿಂದ ಪ್ರೇರಣೆ" ಆಗಿದ್ದು, ವಿದ್ಯಾರ್ಥಿಗಳು ಪ್ರಕೃತಿಯೊಂದಿಗೆ ಹೊಂದಾಣಿಕೆಯ ಜೀವನ, ಪರಿಸರ ಸಂರಕ್ಷಣೆ ಹಾಗೂ ಅಭಿವೃದ್ಧಿಯ ಕುರಿತು ತಮ್ಮ ಆಲೋಚನೆಗಳನ್ನು ಚಿತ್ರಗಳ ಮೂಲಕ ಅಭಿವ್ಯಕ್ತಪಡಿಸಿದರು.
ಸ್ಪರ್ಧೆಯಲ್ಲಿ ಶಾಲೆಯ 5 ರಿಂದ 10ನೇ ತರಗತಿಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಪ್ರಕೃತಿಯ ಸೌಂದರ್ಯ, ಮರಗಳ ಮಹತ್ವ, ಜಲ ಸಂರಕ್ಷಣೆ, ವಾಯು ಮಾಲಿನ್ಯ ನಿಯಂತ್ರಣ, ಹಸಿರು ಭೂಮಿ, ಜೀವ ವೈವಿಧ್ಯತೆ ಹಾಗೂ ಪರಿಸರ ಸ್ನೇಹಿ ಜೀವನಶೈಲಿಯ ಕುರಿತಾದ ಆಕರ್ಷಕ ಚಿತ್ರಗಳನ್ನು ರಚಿಸಿದರು. ವಿದ್ಯಾರ್ಥಿಗಳ ಚಿತ್ರಗಳಲ್ಲಿ ಪರಿಸರದ ಬಗ್ಗೆ ಇರುವ ಕಾಳಜಿ ಮತ್ತು ಜಾಗೃತಿ ಸ್ಪಷ್ಟವಾಗಿ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಮಾತನಾಡಿ, “Inspired by Nature: For Climate – For Our Future ಎಂಬ ವಿಷಯವು ಪ್ರಕೃತಿಯೇ ನಮ್ಮ ಭವಿಷ್ಯದ ಮಾರ್ಗದರ್ಶಕ ಎಂಬ ಸಂದೇಶವನ್ನು ನೀಡುತ್ತದೆ. ಪ್ರಕೃತಿಯನ್ನು ಪ್ರೀತಿಸುವುದು ಮತ್ತು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ಪರಿಸರ ರಕ್ಷಣೆಯ ಮಹತ್ವವನ್ನು ಅರಿತು ತಮ್ಮ ದೈನಂದಿನ ಜೀವನದಲ್ಲಿ ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು” ಎಂದು ತಿಳಿಸಿದರು.
ಸ್ಪರ್ಧೆಯ ಮುಖ್ಯ ಉದ್ದೇಶ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿಯನ್ನು ಮೂಡಿಸುವುದು, ಪ್ರಕೃತಿಯ ಬಗ್ಗೆ ಗೌರವ ಬೆಳೆಸುವುದು ಹಾಗೂ ಪರಿಸರ ಸಂರಕ್ಷಣೆಯ ಅಗತ್ಯತೆಯನ್ನು ಸೃಜನಾತ್ಮಕವಾಗಿ ಅಭಿವ್ಯಕ್ತಪಡಿಸಲು ಅವಕಾಶ ಕಲ್ಪಿಸುವುದಾಗಿತ್ತು. ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ ಮತ್ತು ಪರಿಸರ ಕಾಳಜಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ , ಸ್ಪರ್ಧೆಯಲ್ಲಿ ಉತ್ತಮ ಚಿತ್ರಗಳನ್ನು ಆಯ್ಕೆ ಮಾಡಿ ಬಹುಮಾನಕ್ಕಾಗಿ ಶಿಫಾರಸ್ಸು ಮಾಡಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
One attachment • Scanned by Gmail
