ಬಾಗಲಕೋಟೆ : ಆಗಸ್ಟ ೨6: ತಾಂತ್ರಿಕ ಸಮಸ್ಯೆ ಹೊರತು ಪಡಿಸಿ ಯಾವುದೇ ಕಾರಣಕ್ಕೂ ಕೂಲಿ ಬಾಕಿ ಉಳಿಯಬಾರದು. ಈಗಾಗಲೇ ಕೆಲಸ ಮಾಡಿದ ಕಾರ್ಮಿಕರಿಗೆ ಬಾಕಿ ಕೂಲಿ ಹಣವನ್ನು ಕೂಡಲೇ ಪಾವತಿಗೆ ಕ್ರಮಕೈಗೊಳ್ಳುವಂತೆ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ಜಿ.ಪಂ ಸಿಇಓ ಗಜಾನನ ಬಾಲೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಮಂಗಳವಾರ ಜರುಗಿದ ಗ್ರಾಮೀಣ ಕೂಲಿ ಕಾರ್ಮಿಕರ ಕುಂದು ಕೊರತೆ ಆಲಿಕೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮುತ್ತಲಗಿ ಗ್ರಾಮ ಪಂಚಾಯಿತಿಯಲ್ಲಿ ಮೂರು ತಿಂಗಳಿನಿಂದ ಕೂಲಿ ಕಾರ್ಮಿಕರಿಗೆ ಕೂಲಿ ಪಾವತಿಯಾಗದಿರುವ ವಿಚಾರ ಸಭೆಯಲ್ಲಿ ಪ್ರಸ್ತಾಪಿಸಿದಾಗ ಈ ಕುರಿತು ಪಿಡಿಓ ಅವರ ಬೇಜವಾಬ್ದಾರಿ ಕಂಡುಬಂದ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ನಂದಿಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವೈಯಕ್ತಿಕ ಕಾಮಗಾರಿಗಳ ಜೊತೆಗೆ ಸಾಮೂಹಿಕ ಕಾಮಗಾರಿಗಳಿಗೂ ಹೆಚ್ಚಿನ ಆದ್ಯತೆ ನೀಡಬೇಕು. ಈ ಭಾಗದಲ್ಲಿ ಕೂಲಿ ಕಾರ್ಮಿಕರ ಸಂಖ್ಯೆ ಹೆಚ್ಚಿಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಒದಗಿಸಬೇಕು ಎಂದು ಕಾರ್ಮಿಕರ ಮುಖಂಡರು ಸಭೆಯಲ್ಲಿ ಮನವಿ ಮಾಡಿದರು. ಜಮೀನು ಹೊಂದಿರುವ ಕಾರ್ಮಿಕರಿಗೆ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಿದೆ. ಇದರಿಂದ ಉದ್ಯೋಗದ ಜೊತೆಗೆ ಕೃಷಿ ಚಟುವಟಿಕೆಗಳಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.
ನರೇಗಾ ಯೋಜನೆ ಬದಲಾವಣೆಗೊಂಡು ಇದೀಗ ವಿಬಿಜಿ-ರಾಮ್ಜಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಯೋಜನೆಯಡಿ ಹಲವು ಬಗೆಯ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಯೋಜನೆಯ ಸಾಫ್ಟ್ವೇರ್ ಹೊಸದಾಗಿ ಅಪ್ಡೇಟ್ ಆಗುತ್ತಿರುವ ಹಿನ್ನೆಲೆಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದು, ಇದರಿಂದ ಕಾಮಗಾರಿ ತೆಗೆದುಕೊಳ್ಳುವಲ್ಲಿ ವಿಳಂಬವಾಗುತ್ತಿದೇ ಹೊರತು ಕೆಲಸ ನೀಡುವಲ್ಲಿ ವಿಳಂಬ ಮಾಡಲಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಕನೂರು ಗ್ರಾಮದಲ್ಲಿ ಜನವರಿ ತಿಂಗಳಲ್ಲಿ ಕೆಲಸ ನಿರ್ವಹಿಸಿರುವ ಕಾರ್ಮಿಕರಿಗೆ ಇನ್ನೂ ಕೂಲಿ ಪಾವತಿಯಾಗಿಲ್ಲ ಎಂಬ ದೂರು ಸಭೆಯಲ್ಲಿ ಕೇಳಿಬಂತು. ಮುಧೋಳ ತಾಲೂಕಿನ ಕಿತ್ತಲಿ ಗ್ರಾಮದಲ್ಲಿ ೨೪ ಕಾಮಗಾರಿಗಳಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರು ಇರುವುದರಿಂದ ಉದ್ಯೋಗದ ಪ್ರಮಾಣ ಹೆಚ್ಚಿಸುಚಂತೆ ಮನವಿ ಮಾಡಲಾಯಿತು. ಆಲೂರು ಎಸ್.ಕೆ. ಗ್ರಾಮದಲ್ಲಿ ಇನ್ನೂ ಕೆಲಸ ನೀಡಿಲ್ಲ. ಮಾಚಕನೂರು ಗ್ರಾಮದಲ್ಲಿ ೫೦ ಕುಟುಂಬಗಳು ಜಾಬ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿದ್ದರೂ, ಇದುವರೆಗೆ ಕಾರ್ಡ್ ನೀಡಿಲ್ಲ ಎಂದು ಕಾರ್ಮಿಕರು ತಿಳಿಸಿದರು.
ಇಂಗಳಗಿ ಗ್ರಾಮದಲ್ಲಿ ಕೇವಲ ೭ ಕಾಮಗಾರಿಗಳಿದ್ದು, ೭೨ ಮಂದಿ ಕಾರ್ಮಿಕರಿರುವುದರಿಂದ ಹೆಚ್ಚಿನ ಕೆಲಸ ಒದಗಿಸಬೇಕು ಎಂದು ಮನವಿ ಮಾಡಿದರು. ಗೂಡೂರ ಗ್ರಾಮದಲ್ಲಿ ಕೆಲಸ ಮಾಡಿ ಎಂಟು ತಿಂಗಳು ಕಳೆದರೂ ಕೂಲಿ ಪಾವತಿಯಾಗಿಲ್ಲ ಎಂಬ ಗಂಭೀರ ಸಮಸ್ಯೆಯನ್ನೂ ಕಾರ್ಮಿಕರು ಅಧಿಕಾರಿಗಳ ಗಮನಕ್ಕೆ ತಂದರು. ಈ ಎಲ್ಲ ಪ್ರಕರಣಗಳನ್ನು ಪರಿಶೀಲಿಸಿ, ಅರ್ಹ ಕಾರ್ಮಿಕರಿಗೆ ಬಾಕಿ ಕೂಲಿ ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಇಒ ಸೂಚಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಅಹೀರೆ ಮಾತನಾಡಿ, ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಪಿಡಿ ಜನರೇಷನ್ ಮಾಡಲಾಗಿದೆ. ಗುಳೇದಗುಡ್ಡ ಹಾಗೂ ಬಾದಾಮಿ ತಾಲೂಕುಗಳಲ್ಲಿ ಅರಣ್ಯ ಇಲಾಖೆಯ ಮೂಲಕ ಕೂಲಿ ಕಾರ್ಮಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ನಿರಂತರವಾಗಿ ಉದ್ಯೋಗ ದೊರೆಯುವಂತೆ ಹಾಗೂ ಅವರು ನಿರ್ವಹಿಸಿದ ಕೆಲಸಕ್ಕೆ ನಿಗದಿತ ಅವಧಿಯಲ್ಲಿ ಕೂಲಿ ಪಾವತಿಯಾಗುವಂತೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮವಹಿಸಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಾಲೆ ಅವರು ನಿರ್ದೇಶನ ನೀಡಿದರು. ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್. ಬಸರಿಗಿಡದ ಸೇರಿದಂತೆ ಆಯಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಆಯಾ ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಉಪಸ್ಥಿತರಿದ್ದರು.
ಛಾಯಾಚಿತ್ರ ಲಗತ್ತಿಸಿದೆ.