ಬಳ್ಳಾರಿ, ಏ.23: ಜಿಲ್ಲೆಯ ಪಿಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪರಮದೇವನಹಳ್ಳಿ ಗ್ರಾಮದಲ್ಲಿ ಗುರುವಾರ ಸಾರ್ವಜನಿಕರಿಗೆ ತುರ್ತು ಸಹಾಯವಾಣಿ ERSS-112 ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಗ್ರಾಮದ ಸಾರ್ವಜನಿಕರು, ಮಹಿಳೆಯರು, ಯುವಕರು ಹಾಗೂ ವಿದ್ಯಾರ್ಥಿಗಳಿಗೆ ತುರ್ತು ಸಂದರ್ಭದಲ್ಲಿ ERSS-112 ಸೇವೆಯ ಉಪಯೋಗ, ಮಹತ್ವ ಮತ್ತು ಬಳಕೆ ವಿಧಾನಗಳ ಬಗ್ಗೆ ಪೊಲೀಸ್ ಸಿಬ್ಬಂದಿ ವಿವರಿಸಿದರು. ಯಾವುದೇ ಅಪರಾಧ, ಅಪಘಾತ, ಮಹಿಳೆಯರ ಮೇಲಿನ ದೌರ್ಜನ್ಯ, ಕಳ್ಳತನ, ಗೃಹ ಹಿಂಸೆ, ಮಕ್ಕಳ ಸುರಕ್ಷತೆ ಸೇರಿದಂತೆ ತುರ್ತು ಪರಿಸ್ಥಿತಿಗಳಲ್ಲಿ ತಕ್ಷಣವೇ 112 ಸಂಖ್ಯೆಗೆ ಕರೆ ಮಾಡಿ ನೆರವು ಪಡೆಯಬಹುದೆಂದು ತಿಳಿಸಲಾಯಿತು.
ಈ ವೇಳೆ ಪೊಲೀಸ್ ಅಧಿಕಾರಿಗಳು, ಸರ್ಕಾರದ ಮಹತ್ವಾಕಾಂಕ್ಷಿ ಸೇವೆಯಾದ ERSS-112 ಸಾರ್ವಜನಿಕರ ರಕ್ಷಣೆಗೆ ಸದಾ ಸಿದ್ಧವಾಗಿದ್ದು, ಒಂದು ಕರೆ ಮೂಲಕ ಪೊಲೀಸ್, ಅಗ್ನಿಶಾಮಕ ಹಾಗೂ ಆಂಬುಲೆನ್ಸ್ ಸೇವೆಗಳನ್ನು ತಲುಪಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಜಾಗೃತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ 112 ಸೇವೆಯನ್ನು ದುರುಪಯೋಗಪಡಿಸಿಕೊಳ್ಳಬಾರದು, ನೈಜ ತುರ್ತು ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು ಎಂದು ಮನವಿ ಮಾಡಲಾಯಿತು. ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದ ಪೊಲೀಸರು, ತುರ್ತು ಸಂದರ್ಭದಲ್ಲಿ ಹೇಗೆ ಸ್ಪಂದಿಸಬೇಕು, ಯಾವ ಮಾಹಿತಿ ನೀಡಬೇಕು ಎಂಬುದರ ಕುರಿತು ಪ್ರಾಯೋಗಿಕವಾಗಿ ತಿಳಿಸಿದರು.
ಗ್ರಾಮದ ಜನರು ಪೊಲೀಸ್ ಇಲಾಖೆಯ ಈ ಜಾಗೃತಿ ಕಾರ್ಯಕ್ರಮವನ್ನು ಸ್ವಾಗತಿಸಿ, ಇಂತಹ ಅರಿವು ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶಗಳಲ್ಲಿ ಮತ್ತಷ್ಟು ನಡೆಯಬೇಕೆಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಪಿಡಿ ಪೊಲೀಸ್ ಠಾಣೆಯ ಸಿಬ್ಬಂದಿ, ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.