ಯರಗಟ್ಟಿ: ಪ್ರಜಾಸೇವಾ ಆಂದೋಲನ ಸಭೆಯನ್ನು ಮೊದಲ ಬಾರಿಗೆ ಯರಗಟ್ಟಿಯಲ್ಲಿ ಆಯೋಜಿಸಲಾಗಿದ್ದು, ಮುಂದಿನ ಮೂರು ತಿಂಗಳಲ್ಲಿ ರಾಜ್ಯದ ಎಲ್ಲ ತಾಲೂಕುಗಳಲ್ಲೂ ಇಂತಹ ಸಭೆಗಳನ್ನು ನಡೆಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯಾದ್ಯಂತ ಜನಸ್ಪಂದನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಬೆಳಗಾವಿಯ ಯರಗಟ್ಟಿಯಲ್ಲಿ ಮೊದಲ ಜನಸ್ಪಂದನ ಯಶಸ್ವಿಯಾಗಿ ನಡೆದಿದ್ದು, ಮುಂದಿನ ಮೂರು ತಿಂಗಳೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೂ ಈ ಕಾರ್ಯಕ್ರಮವನ್ನು ವಿಸ್ತರಿಸಿ ಸಾರ್ವಜನಿಕರಿಗೆ ಶೀಘ್ರವಾಗಿ ನ್ಯಾಯ ಒದಗಿಸಲು ಬದ್ಧವಾಗಿರುವುದಾಗಿ ಸ್ಪಷ್ಟಪಡಿಸಿದರು.
ಭೂಮಿ ಹಕ್ಕು, ಮನೆ ನಿರ್ಮಾಣ, ಕೆಇಬಿ ವಿದ್ಯುತ್ ಸಮಸ್ಯೆಗಳು ಹಾಗೂ ಶಾಲಾ-ಕಾಲೇಜುಗಳಿಗೆ ಸಂಬಂಧಿಸಿದ ವಿವಿಧ ಇಲಾಖೆಗಳ ಅಹವಾಲುಗಳನ್ನು ತ್ವರಿತವಾಗಿ ಬಗೆಹರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳು ಎಲ್ಲಾ ತಾಲ್ಲೂಕುಗಳಲ್ಲಿ ಲಭ್ಯವಿರಲಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.
ಯರಗಟ್ಟಿಗೆ ಪ್ರಮುಖ ಕಚೇರಿಗಳ ಸ್ಥಾಪನೆ: ಯರಗಟ್ಟಿಯಲ್ಲಿ ಪ್ರಮುಖ ಸರ್ಕಾರಿ ಕಚೇರಿಗಳಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಕೆಲವು ಕಚೇರಿಗಳು ಆರಂಭವಾಗಿವೆ. ಪ್ರಮುಖ ಕಚೇರಿಗಳನ್ನು ಸ್ಥಾಪಿಸಲು ಸ್ವಲ್ಪ ಸಮಯ ಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಯರಗಟ್ಟಿಗೆ ಅಗತ್ಯವಿರುವ ಪ್ರಮುಖ ಕಚೇರಿಗಳನ್ನು ತರಲಾಗುವುದು ಎಂದು ಭರವಸೆ ನೀಡಿದರು.
ಬೆಳಗಾವಿಯ 9 ತಾಲೂಕುಗಳು ಬರಪೀಡಿತ ಪಟ್ಟಿಗೆ: ಬೆಳಗಾವಿ ಜಿಲ್ಲೆಯ ಒಂಬತ್ತು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸರ್ಕಾರ ಸೇರ್ಪಡೆ ಮಾಡಿದೆ. ಮುಂದಿನ ದಿನಗಳಲ್ಲಿ ಇನ್ನೂ ಆರು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವ ಸಾಧ್ಯತೆ ಇದ್ದು, ಇದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಬರಪೀಡಿತ ತಾಲೂಕು ಘೋಷಣೆಗೆ ಕೇಂದ್ರದ ಮಾನದಂಡ ಅಗತ್ಯ: ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವುದು ರಾಜ್ಯ ಸರ್ಕಾರ ಅಥವಾ ಅಧಿಕಾರಿಗಳ ಕೈಯಲ್ಲಿಲ್ಲ. ಬರಪೀಡಿತ ಪ್ರದೇಶಗಳ ಘೋಷಣೆಗೆ ಸಂಬಂಧಿಸಿದ ಮಾನದಂಡಗಳು ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿವೆ. ನಿಗದಿತ ಮಾನದಂಡಗಳಿಗೆ ತಾಲೂಕುಗಳು ಒಳಪಟ್ಟರೆ ಮಾತ್ರ ಅವುಗಳನ್ನು ಬರಪೀಡಿತ ಎಂದು ಘೋಷಿಸಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಇಬ್ಬರೂ ನಮ್ಮ ನಾಯಕರು: ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ, “ಸಿದ್ದರಾಮಯ್ಯ ಬಲವಾಗಿದ್ದರೆ ಕಾಂಗ್ರೆಸ್ ಬಲವಾಗಿರುತ್ತದೆ. ಸಿದ್ದರಾಮಯ್ಯ ದುರ್ಬಲರಾದರೆ ಕಾಂಗ್ರೆಸ್ ಕೂಡ ದುರ್ಬಲವಾಗುತ್ತದೆ” ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರೂ ತಮ್ಮ ನಾಯಕರು. ಸರ್ಕಾರದಲ್ಲಿರುವ ಎಲ್ಲ ಸಚಿವರು ಮತ್ತು ಶಾಸಕರು ದುರ್ಬಲರಾದರೆ ಮಾತ್ರ ಸರ್ಕಾರ ದುರ್ಬಲವಾಗುತ್ತದೆ; ಒಬ್ಬರಿಂದ ಮಾತ್ರ ಸರ್ಕಾರ ದುರ್ಬಲವಾಗಲು ಸಾಧ್ಯವಿಲ್ಲ ಎಂದ ಅವರು, ಯುಪಿಐ ವಹಿವಾಟುಗಳಿಗೆ ಸಂಬಂಧಿಸಿದ ತೆರಿಗೆ ವಿಚಾರದ ಕುರಿತು ಕೇಂದ್ರ ಸರ್ಕಾರವನ್ನೇ ಪ್ರಶ್ನಿಸಬೇಕು ಎಂದು ಮಾಧ್ಯಮದವರಿಗೆ ಸತೀಶ್ ಜಾರಕಿಹೊಳಿ ಹೇಳಿದರು.