ಕೊಪ್ಪಳ: ಪೂರ್ವ ಸಿದ್ಧತೆ ಮಾಡಿಕೊಳ್ಳುವ ಮೂಲಕ ಪ್ರಸಕ್ತ ಮುಂಗಾರಿನಲ್ಲಿ ಜಿಲ್ಲೆಯಾದ್ಯಂತ
ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಪಕ್ಷದ ಮುಖಂಡರ ನಿಯೋಗದೊಂದಿಗೆ ಸೋಮವಾರ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಅವರನ್ನು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಭೇಟಿಯಾಗಿ ಈ ಕುರಿತು ಅವರು ಮನವಿ ಪತ್ರ ಸಲ್ಲಿಸಿದರು.
"ಪ್ರಸಕ್ತ ವರ್ಷ ಮುಂಗಾರು ಅವಧಿ ಮೇ ಮೂರನೇ ವಾರದಿಂದ ಆರಂಭವಾಗುವ ನಿರೀಕ್ಷೆಯಿದೆ.
ಪೂರ್ವ ಸಿದ್ಧತೆ ಮಾಡಿಕೊಳ್ಳುವ ಮೂಲಕ ಮುಂಗಾರಿನ ಆರಂಭದಲ್ಲಿ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕಳೆದ ವರ್ಷ ಕೊಪ್ಪಳ ನಗರದಲ್ಲಿ ಯೂರಿಯಾ ಗೊಬ್ಬರದ ಕೊರತೆಯ ಹಿನ್ನೆಲೆಯಲ್ಲಿ ಬಸವೇಶ್ವರ ವೃತ್ತದ ಬಳಿ ಇರುವ ತಾಲೂಕು ಒಕ್ಕಲುತನ ಹುಟ್ಟುವಳಿ ಸಹಕಾರಿ ಸಂಘದ (ಟಿಎಪಿಎಂಸಿ) ಮುಂಭಾಗ ರೈತರು ತೀವ್ರ ಪ್ರತಿಭಟನೆ ನಡೆಸಿದ್ದು ಹಾಗೂ ಕೊಪ್ಪಳ ತಾಲೂಕಿನ ಕುಣಿಕೇರಿ ಗ್ರಾಮದ ಚಂದ್ರಪ್ಪ ಬಡಿಗಿ ಮಣ್ಣು ತಿಂದು ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯಾದ್ಯಂತ ಸುದ್ದಿಯಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರಕಾರಗಳು ಪ್ರತಿಕ್ರಿಯೆ ನೀಡಬೇಕಾಯಿತು. ಇಂತಹ ಘಟನೆಗಳು ಮರುಕಳಿಸಿರಂತೆ ನೋಡಿಕೊಳ್ಳುವ ಜವಾಬ್ದಾರಿ ಜಿಲ್ಲಾಡಳಿತದ್ದು," ಎಂದು ಮನವಿ ಪತ್ರದಲ್ಲಿ ಹೇಳಿದ್ದಾರೆ.
ಜಿಲ್ಲೆಯಾದ್ಯಂತ ಕೃಷಿ ಭೂಮಿಯ ವಿಸ್ತೀರ್ಣ, ಅಗತ್ಯವಿರುವ ಬಿತ್ತನೆ ಬೀಜಗಳು, ರಸಗೊಬ್ಬರ ಹಾಗೂ ಕೀಟನಾಶಕಗಳ ಪ್ರಮಾಣಕ್ಕೆ ಅನುಗುಣವಾಗಿ ರಸಗೊಬ್ಬರ, ಕೀಟನಾಶಕ ಔಷಧಿಗಳ ಹಾಗೂ ಯೂರಿಯಾ ದಾಸ್ತಾನು ಮಾಡಿಕೊಳ್ಳಬೇಕು. ಯೂರಿಯಾ ಪಡೆಯಲು ರೈತರಿಗೆ ಯಾವುದೇ ರೀತಿಯ ನಿಬಂಧನೆ ಹೇರಬಾರದು. ರಸಗೊಬ್ಬರದ ಕಾಳದಂಧೆ ನಡೆಯದಂತೆ, ಅದರ ಬೆಲೆ ಹೆಚ್ಚದಂತೆ ಹಾಗೂ ಕಳಪೆ ಬಿತ್ತನೆ ಬೀಜ ಪೂರೈಕೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಮೆಕ್ಕೆಜೋಳ, ಸಜ್ಜೆ, ಭತ್ತ, ತೊಗರಿ, ಸೂರ್ಯಕಾಂತಿ ಬೆಳೆಗಳ ಬಿತ್ತನೆ ಬೀಜ ವಿತರಣೆಯನ್ನು 20 ರೈತ ಸಂಪರ್ಕ ಕೇಂದ್ರಗಳ ಜೊತೆಗೆ ಹೆಚ್ಚುವರಿಯಾಗಿ 7 ಕೇಂದ್ರಗಳಲ್ಲಿ ವಿತರಣೆಗೆ ವ್ಯವಸ್ಥೆ ಮಾಡಿಕೊಂಡರೆ ಉತ್ತಮ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ನಿಯೋಗದಲ್ಲಿ ರಾಜ್ಯ ಯುವ ಘಟಕದ ಕಾರ್ಯಾಧ್ಯಕ್ಷ ರಾಜು ನಾಯಕ, ಜಿಲ್ಲಾಧ್ಯಕ್ಷ ಸುರೇಶ್ ಭೂಮರಡ್ಡಿ, ಜಿಲ್ಲಾ ರೈತ ವಿಭಾಗದ ಅಧ್ಯಕ್ಷ ವೆಂಕಟೇಶರಾವ, ತಾಲೂಕ ಗೌರವಾಧ್ಯಕ್ಷ ಈಶಪ್ಪ ಮಾದಿನೂರು, ಜಿಲ್ಲಾ ವಕ್ತಾರ ಮಲ್ಲನಗೌಡ ಕೋನನಗೌಡ್ರು, ಜಿಲ್ಲಾ ಉಪಾಧ್ಯಕ್ಷ ಮೂರ್ತ್ಯಪ್ಪ ಹಿಟ್ನಾಳ್, ಜಿಲ್ಲಾ ಓಬಿಸಿ ಅಧ್ಯಕ್ಷ ಕರಿಯಪ್ಪ ಹಾಲವರ್ತಿ, ಜಿಲ್ಲಾ ಸಂಸ್ಕೃತಿ ವಿಭಾಗದ ಅಧ್ಯಕ್ಷ ಮಂಜುನಾಥ್ ಸೊರಟೂರ, ಜಿಲ್ಲಾ ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ರಮೇಶ್ ಡಂಬ್ರಳ್ಳಿ, ಜಿಲ್ಲಾ ಕೈಗಾರಿಕಾ ಅಧ್ಯಕ್ಷ ಮಾರುತಿಗೌಡ್ರು ಹಿರೇಬಗನಾಳ, ಜಿಲ್ಲಾ ಅಲ್ಪಸಂಖ್ಯಾತ ಅಧ್ಯಕ್ಷ ಸಿರಾಜ್ ಅಹಮದ್, ಜಿಲ್ಲಾ ಎಸ್ ಸಿ ಘಟಕದ ಅಧ್ಯಕ್ಷ ಶಾಂತಕುಮಾರ್ ದೊಡ್ಡಮನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಜಡಿ, ನಗರ ಘಟಕದ ಅಧ್ಯಕ್ಷ ಸೋಮನಗೌಡ ಹೊಗರನಾಳ, ನಗರ ಘಟಕ ಅಲ್ಪಸಂಖ್ಯಾತ ಅಧ್ಯಕ್ಷ ಸಿರಾಜ್ ಕೋಲ್ಕಾರ್, ತಾಲೂಕು ಎಸ್ ಸಿ ಘಟಕದ ಅಧ್ಯಕ್ಷ ಸುರೇಶ ದದೇಗಲ್, ಜಿಲ್ಲಾ ಸಹ ಕಾರ್ಯದರ್ಶಿ ರವಿ ಮೇದಾರ, ತಾಲೂಕು ಎಸ್ ಟಿ ಘಟಕದ ಅಧ್ಯಕ್ಷ ಮಲ್ಲಪ್ಪ ಹಂದ್ರಾಳ, ನಗರ ಘಟಕದ ಗೌರವಾಧ್ಯಕ್ಷೆ ರತ್ನಮ್ಮ ಹಿರೇಮಠ, ನಗರ ಕೋಶಾಧ್ಯಕ್ಷ ಶಿವರಾಜ್ ಮಠಪತಿ, ಜಿಲ್ಲಾ ಖಜಾಂಚಿ ಮೌನೇಶ್ ಕಿನ್ನಾಳ, ನಗರ ಎಸ್ ಸಿ ಘಟಕದ ಅಧ್ಯಕ್ಷ ಮಾರುತಿ ಹೆಚ್, ಮುಖಂಡರಾದ ಸಿದ್ದರಡ್ಡಿ ಸಿಂದೋಗಿ, ಮಂಜುನಾಥ್ ವದಗನಾಳ, ಖಾಜಾಹುಸೇನ್ ಹೊಸಳ್ಳಿ ಹಾಗೂ ಇತರರು ಇದ್ದರು.
