ಬಾಗಲಕೋಟೆ, ಜುಲೈ ೦೪: ಕ್ಷೇತ್ರ ಮಟ್ಟದಲ್ಲಿ ರೈತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ತಾಂತ್ರಿಕ ಸಲಹೆ ಹಾಗೂ ಮಾರ್ಗದರ್ಶನ ನೀಡುವ ಮೂಲಕ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕೆಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಜರುಗಿದ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತೋಟಗಾರಿಕೆ ಬೆಳೆಗೆ ಜಿಲ್ಲೆಯಲ್ಲಿ ವಿಫುಲ ಅವಕಾಶಗಳಿದ್ದು, ಕ್ಷೇತ್ರದ ವ್ಯಾಪ್ತಿ ಹೆಚ್ಚಿಸುವ ಕೆಲಸವಾಗಬೇಕು. ಸರಕಾರದ ಯೋಜನೆಗಳ ಪ್ರಯೋಜನ ಅರ್ಹ ರೈತರಿಗೆ ಪಾರದರ್ಶಕವಾಗಿ ಹಾಗೂ ಸಕಾಲದಲ್ಲಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ನಿಗದಿತ ಗುರಿಗಳನ್ನು ಕಾಲಮಿತಿಯೊಳಗೆ ಸಾಧಿಸಲು ಅಗತ್ಯ ಕ್ರಮಕೈಗೊಳ್ಳಬೇಕೆಂದರು.
ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ಇಲಾಖೆಯ ಎಲ್ಲ ಯೋಜನೆಗಳ ಮಾಹಿತಿ ಹಾಗೂ ಗುರಿ ಸಾಧನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ಮಾಡಿದರು. ಹಣ್ಣು, ತರಕಾರಿ ಹಾಗೂ ಹೂ ಬೆಳಗಳ ಅಭಿವೃದ್ದಿ, ಸಂರಕ್ಷಿತ ಕೃಷಿ, ಹನಿ ನೀರಾವರಿ, ತೋಟಗಾರಿಗೆ ವಿಸ್ತರಣೆ, ರೈತರಿಗೆ ನೀಡಲಾಗುತ್ತಿರುವ ವಿವಿಧ ಅನುದಾನ ಸೌಲಭ್ಯಗಳು ಸೇರಿದಂತೆ ಇಲಾಖೆಯ ಪ್ರಮುಖ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ವಿವರವಾಗಿ ಚರ್ಚಿಸಿದರು.
ಸರ್ಕಾರದ ಯೋಜನೆಗಳ ಬಗ್ಗೆ ರೈತರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು. ಗ್ರಾಮ ಮಟ್ಟದಲ್ಲಿಯೇ ರೈತರಿಗೆ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವ ಕಾರ್ಯವನ್ನು ಚುರುಕುಗೊಳಿಸಬೇಕು. ಯೋಜನೆ ಅನುಷ್ಠಾನದಲ್ಲಿ ಯಾವುದೇ ಲೋಪ ಅಥವಾ ವಿಳಂಬಕ್ಕೆ ಅವಕಾಶ ನೀಡಬಾರದು. ರೈತರಿಗೆ ತಾಂತ್ರಿಕ ಮಾರ್ಗದರ್ಶನ ನೀಡುವ ಕೆಲಸವಾಗಬೇಕು. ಇಲಾಖೆಗಳ ನಡುವಿನ ಸಮನ್ವಯ ಸಾಧಿಸಿ ತೋಟಗಾರಿಕೆ ಕ್ಷೇತ್ರದ ಅಭಿವೃದ್ದಿಗೆ ಪೂರಕವಾದ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದರು.
ತೋಟಗಾರಿಕೆ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ೬೪೪೭೧ ಹೆಕ್ಟೆರ್ನಷ್ಟು ತೋಟಗಾರಿಕೆ ವಿಸ್ತೀರ್ಣವಿದ್ದು, ಅದರಲ್ಲಿ ಹಣ್ಣು, ತರಕಾರಿ, ಸಾಂಬಾರು ಬೆಳೆಗಳು, ತೋಟದ ಬೆಳೆಗಳು, ಹೂವಿನ ಬೆಳೆಗಳು, ಔಷಧೀಯ ಸಸ್ಯಗಳು ಸುಗಂಧಿತ ಸಸ್ಯಗಳನ್ನು ಬೆಳೆಯಲಾಗುತ್ತಿದೆ. ಅದರಲ್ಲಿ ತೋಟಗಾರಿಕೆ ಇಲಾಖೆಯ ಕ್ಷೇತ್ರ, ನರ್ಸರಿಗಳ ಜಮೀನು ೭೯.೨೯ ಎಕರೆ ಇದೆ. ೬ ರೈತ ಉತ್ಪಾದಕ ಸಂಘಗಳು ಕಾರ್ಯನಿರ್ವಹಿಸುತ್ತಿವೆ ಎಂದ ಅವರು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೊಜನೆ, ಸೋಲಾರ ಪಂಪಸೆಟ್, ಕೋಲ್ಡ ಸ್ಟೋರೆಜ್ ಯುನಿಟ್, ಹವಾಮಾನ ಆಧಾರಿತ ಘಟಕಗಳಡಿ ಸಹಾಯಧನ ಯೋಜನೆ, ಪಿಎಂ ಫಸಲ್ ಬಿಮಾ ಯೋಜನೆ, ಪಿಎಂ ಕೃಷಿ ಸಿಂಚಾಯಿ ಯೋಜನೆ, ಎಣ್ಣೆ ತಾಳೆ ಅಭಿವೃದ್ದಿ ಯೋಜನೆ ಸೇರಿದಂತೆ ಇತರೆ ಯೋಜನೆಗಳ ಬಗ್ಗೆ ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ ಸೇರಿದಂತೆ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
