ಬೀಳಗಿ -ಮತದಾನ ಹಕ್ಕು ಪ್ರತಿಯೊಬ್ಬ ನಾಗರಿಕನಿಗೆ ಸಂವಿಧಾನ ನೀಡಿರುವ ಅತ್ಯಂತ ಮಹತ್ವದ ಶಕ್ತಿಯಾಗಿದ್ದು, ಆ ಹಕ್ಕನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು.
ತಾಲೂಕಿನ ಕೊರ್ತಿ (ಪು.ಕೆ.) ಗ್ರಾಮದಲ್ಲಿರುವ ಕಾಂಗ್ರೆಸ್ ಕಾರ್ಯಾಲಯದಲ್ಲಿ ಬೀಳಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಬೂತ್ ಮಟ್ಟದ ಬಿಎಲ್ಎ-2 ಕಾರ್ಯಕರ್ತರ ಕಾರ್ಯಾಗಾರ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ವಿವಿಧ ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರನ ಹೆಸರೂ ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಮತದಾನದ ಹಕ್ಕು ಕೇವಲ ಚುನಾವಣೆಗಷ್ಟೇ ಸೀಮಿತವಾಗಿಲ್ಲ, ಅದು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ ಎಂದು ಅವರು ಹೇಳಿದರು.
ಪ್ರತಿಯೊಂದು ಕುಟುಂಬದ ಮನೆಗೂ ಬಿಎಲ್ಎ-2 ಕಾರ್ಯಕರ್ತರು, ಪಂಚ ಗ್ಯಾರಂಟಿ ಯೋಜನೆಯ ಪ್ರತಿನಿಧಿಗಳು ಹಾಗೂ ಹಿರಿಯರು 2025ರ ಮತದಾರರ ಪಟ್ಟಿಯಂತೆ ಪರಿಶೀಲಿಸಿ, ಯಾವುದೇ ಅರ್ಹ ಮತದಾರರ ಹೆಸರು ಕೈ ತಪ್ಪದಂತೆ ಎಚ್ಚರ ವಹಿಸಬೇಕು. ಮತದಾನದ ಹಕ್ಕು ಉಳಿಸಿಕೊಳ್ಳುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದರು.
ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದಂತೆ ನೀಡಲಾಗುವ ನಮೂನೆಯನ್ನು ಪ್ರತಿಯೊಬ್ಬರೂ ಸರಿಯಾಗಿ ಭರ್ತಿ ಮಾಡಿ ತಹಶೀಲ್ದಾರ್ ಕಚೇರಿಗೆ ಸಲ್ಲಿಸಬೇಕು. ಅದರ ಜೆರಾಕ್ಸ್ ಪ್ರತಿಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳುವಂತೆ ಸೂಚಿಸಿದ ಅವರು, ಈ ಕಾರ್ಯದಲ್ಲಿ ಬಿಎಲ್ಎ-2 ಕಾರ್ಯಕರ್ತರು ಸೇರಿದಂತೆ ಎಲ್ಲರೂ ಕೈಜೋಡಿಸಬೇಕು. ಪಕ್ಷದ ನಿರ್ದೇಶನದಂತೆ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸದವರ ಸ್ಥಾನದಲ್ಲಿ ಬೇರೆಯವರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಬೆಳವಣಿಗೆಗಳನ್ನು ಉಲ್ಲೇಖಿಸಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ನಿರ್ಧಾರಗಳಿಗೆ ಗೌರವ ನೀಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೇಲಿನ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ವಿರೋಧ ಪಕ್ಷದ ಕೆಲವು ಶಾಸಕರ ಮತಗಳು ಕಾಂಗ್ರೆಸ್ ಪರವಾಗಿ ಚಲಾವಣೆಯಾಗಿರುವುದನ್ನು ಉಲ್ಲೇಖಿಸಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಜೊತೆಗೆ ಶಾಲಾ ಮಕ್ಕಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಅಭಿನಂದನೆ ಸಲ್ಲಿಸಿದರು.
ರಾಜ್ಯದ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ ಅವರು, ಬಾಗಲಕೋಟೆ ಜಿಲ್ಲೆಯ ಐದು ಕ್ಷೇತ್ರಗಳಲ್ಲಿಯೂ ಪಕ್ಷದ ವಿರುದ್ಧ ಸಂಚು ರೂಪಿಸಲಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ ಪಕ್ಷದ ಕಾರ್ಯಕರ್ತರು ಮತ್ತಷ್ಟು ಸಂಘಟಿತರಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಕೆಪಿಸಿಸಿ ಕಾರ್ಯದರ್ಶಿ ಬಸವಪ್ರಭು ಸರನಾಡಗೌಡ ಮಾತನಾಡಿ ಇಂದಿನ ರಾಜಕೀಯ ಪರಿಸ್ಥಿತಿ ಕಾನೂನುಬದ್ಧತೆಯ ಹೆಸರಿನಲ್ಲಿ ತಂತ್ರ-ಕುತಂತ್ರಗಳಿಗೆ ಅವಕಾಶ ಕಲ್ಪಿಸುವಂತಾಗಿದೆ,ಬೀಳಗಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಮತಗಳು ಕೊಟ್ಟಿ ಮತಗಳು ಇದ್ದಾವೆ ಎಂದು ಆರೋಪಿಸಿದ ಅವರು, ಇದರ ಹಿಂದೆ ಭಾರತೀಯ ಜನತಾ ಪಕ್ಷದ ಕೈವಾಡವಿದೆ ಎಂದು ದೂರಿದರು. ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಅತ್ಯಂತ ಪವಿತ್ರವಾಗಿದ್ದು, ಯಾವುದೇ ಅರ್ಹ ಮತದಾರನ ಹಕ್ಕಿಗೆ ಧಕ್ಕೆಯಾಗದಂತೆ ಎಲ್ಲರೂ ಜಾಗೃತರಾಗಿರಬೇಕೆಂದು ಅವರು ಕರೆ ನೀಡಿದರು.
ಸಭೆಯಲ್ಲಿ ಮಾಜಿ ಕೆಪಿಸಿಸಿ ಕಾರ್ಯದರ್ಶಿ ಬಸವಪ್ರಭು ಸರನಾಡಗೌಡ,ಮುಖಂಡ ಮಹಾದೇವ ಹಾದಿಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲಯ್ಯ ಕಂಬಿ, ಅನವೀರಯ್ಯ ಪ್ಯಾಟಿಮಠ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನಮಂತ ಕಾಖಂಡಕಿ, ಎಮ್.ಎಲ್.ಕೆಂಪಲಿಂಗನ್ನವರ, ರಾಮನಗೌಡ ಜಕ್ಕನಗೌಡರ, ಅನೀಲ ಹಳ್ಯಾಳ, ರಸೂಲ ಮುಜಾವರ, ಚಿದಾನಂದ ನಂದ್ಯಾಳ, ಮಂಜು ಕನಬುರ, ಬಸವರಾಜ ಹಳ್ಳದಮನಿ, ಸಿದ್ದು ಸಾರಾವರಿ, ಶ್ರೀಶೈಲ ಅಂಟಿನ ಸೇರಿದಂತೆ ಪಕ್ಷದ ಮುಖಂಡರು, ಬಿಎಲ್ಎ-2 ಕಾರ್ಯಕರ್ತರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.