ಅಥಣಿ: ತಾಲೂಕಿನ ಪಾರ್ಥನಹಳ್ಳಿ ಗ್ರಾಮದ ಉರ್ದು ಉನ್ನತೀಕರಿಸಿದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಹೆಚ್ಚುವರಿ ತರಗತಿ ಕೊಠಡಿಗಳ ಅಭಾವ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯನ್ನು ತಕ್ಷಣ ನಿವಾರಿಸಬೇಕು ಎಂದು ಆಗ್ರಹಿಸಿ ಗ್ರಾಮದ ಹಿರಿಯರು ಹಾಗೂ ಅಂಜುಮನ್-ಎ-ಇಸ್ಲಾಂ ಸಮಿತಿಯ ನೇತೃತ್ವದಲ್ಲಿ ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೆಲಕಾಲ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್. ಮುಂಜಿ ಅವರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಮನವಿಗೆ ಸ್ಪಂದಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ, ಶಾಲೆಗೆ ತಕ್ಷಣವೇ ಇಬ್ಬರು ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗುವುದು. ಜೊತೆಗೆ ಎರಡು ಹೊಸ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಅಗತ್ಯ ಕ್ರಮವನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಫೀಕ್ ಪಟೇಲ್, "ಪಾರ್ಥನಹಳ್ಳಿ ಉರ್ದು ಶಾಲೆಯಲ್ಲಿ ಹಲವು ತಿಂಗಳುಗಳಿಂದ ಶಿಕ್ಷಕರ ಕೊರತೆ ಹಾಗೂ ಮೂಲಭೂತ ಸೌಕರ್ಯಗಳ ಅಭಾವದಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೀವ್ರ ತೊಂದರೆಯಾಗುತ್ತಿದೆ. ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಶಾಲೆಯ ಎಲ್ಲಾ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಬೇಕು. ಅಧಿಕಾರಿಗಳು ನೀಡಿರುವ ಭರವಸೆಯನ್ನು ಕೂಡಲೇ ಕಾರ್ಯರೂಪಕ್ಕೆ ತರಬೇಕು. ಇಲ್ಲವಾದರೆ ಗ್ರಾಮಸ್ಥರೊಂದಿಗೆ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ," ಎಂದು ಎಚ್ಚರಿಸಿದರು.
ಮುಖಂಡ ಅಸ್ಲಂ ನಾಲಬಂದ ಮಾತನಾಡಿ, "ಶಾಲೆ ಉನ್ನತೀಕರಣಗೊಂಡು ನಾಲ್ಕು ತಿಂಗಳು ಕಳೆದರೂ ಇದುವರೆಗೆ ಅಗತ್ಯ ಶಿಕ್ಷಕರನ್ನು ನಿಯೋಜಿಸಿಲ್ಲ. ಶಿಕ್ಷಕರಿಲ್ಲದೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹೇಗೆ ದೊರೆಯುತ್ತದೆ? ಶಾಲೆಯಲ್ಲಿ ಸಮರ್ಪಕ ಶೌಚಾಲಯ, ತರಗತಿ ಕೊಠಡಿಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕೊರತೆ ಇದೆ. ಈ ಕುರಿತು ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಗ್ರಾಮದಲ್ಲೇ ಪ್ರೌಢಶಾಲೆ ಆರಂಭವಾಗಿರುವುದರಿಂದ ಮಕ್ಕಳಿಗೆ ಪಟ್ಟಣಕ್ಕೆ ತೆರಳಿ ಶಿಕ್ಷಣ ಪಡೆಯುವ ಅನಿವಾರ್ಯತೆ ತಪ್ಪಿದೆ. ಆದರೆ ಅವರಿಗೆ ಸಿಗಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸದಿರುವುದು ಬೇಸರದ ಸಂಗತಿ. ಶಿಕ್ಷಣ ಇಲಾಖೆ ಎರಡು-ಮೂರು ದಿನಗಳೊಳಗೆ ಅಗತ್ಯ ವ್ಯವಸ್ಥೆ ಕಲ್ಪಿಸಿ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಬೇಕು. ಇಲ್ಲವಾದರೆ ಶಿಕ್ಷಣಕ್ಕಾಗಿ ಹೋರಾಟ ಅನಿವಾರ್ಯವಾಗಲಿದೆ," ಎಂದು ಹೇಳಿದರು.
ಪ್ರತಿಭಟನೆಗೆ ಅಂಜುಮನ್-ಎ-ಇಸ್ಲಾಂ ಕಮಿಟಿ, ಅಥಣಿ ಹಾಗೂ ಕನ್ನಡ ಪರ ಹೋರಾಟಗಾರರು ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅಂಜುಮನ್-ಎ-ಇಸ್ಲಾಂ ಕಮಿಟಿ ತಾಲೂಕು ಅಧ್ಯಕ್ಷ ಸಯ್ಯದ ಅಮೀನ್ ಗದ್ಯಾಳ, ಪಾರ್ಥನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಬ್ದುಲ್ ಮುಲ್ಲಾ, ಶಬ್ಬೀರ್ ಸಾತಬಚ್ಚೆ, ಅಣ್ಣಾಸಾಬ ತೆಲಸಂಗ, ಅಬ್ದುಲ್ ಅಜೀಜ್ ಮುಲ್ಲಾ, ಷರೀಫ್ ಮುಲ್ಲಾ, ರಮೇಶ್ ಕಾಂಬಳೆ, ಇಬ್ರಾಹಿಂ ಮೊಳೆ, ಕಾಡಪ್ಪ ಶಿಂಗಾಡಿ, ಇಲಾಯಿ ಮೊಳೆ, ಐನುದ್ದೀನ್ ಬಿರಾದರ್, ಸಿಕಂದರ್ ಬಿರಾದರ್, ಇಸ್ಮಾಯಿಲ್ ಪಟೇಲ್ ಸೇರಿದಂತೆ ಗ್ರಾಮಸ್ಥರು ಮತ್ತು ಮುಖಂಡರು ಉಪಸ್ಥಿತರಿದ್ದರು.
