ಇಂಡಿ : ಉತ್ತರ ಕರ್ನಾಟಕದಾಧ್ಯಂತ ಮುಂಗಾರು ಮಳೆ ಇಲ್ಲದೆ ಬರ ಆವರಿಸಿದ್ದು, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಬೇಗನೆ ಸಚಿವ ಸಂಪುಟ ವಿಸ್ತರಣೆ ಮಾಡಿ,ಸಚಿವರನ್ನು ಬರಪೀಡಿತ ಜಿಲ್ಲೆಗಳ ಉಸ್ತುವಾರಿಗಳನ್ನಾಗಿ ಮಾಡಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ತಾಲೂಕು ಅಧ್ಯಕ್ಷ ಪ್ರಶಾಂತ ಕಾಳೆ ಮನವಿ ಮಾಡಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯ ಕೊರತೆಯಿಂದ ರೈತರು,ಜನ,ಜಾನುವಾರುಗಳು ತೊಂದರೆ ಅನುಭವಿಸುತ್ತಿವೆ. ಬರ ಕಾಮಗಾರಿ ಸಮರೋಪಾದಿಯಲ್ಲಿ ಕೈಗೊಳ್ಳಲು ಸಚಿವ ಸಂಪುಟ ಸಭೆ ಕರೆದು ಯೋಜನೆಗಳನ್ನು ರೂಪಿಸಲು ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಿ ನೂತನ ಸಚಿವರಿಗೆ ಜವಾಬ್ದಾರಿ ವಹಿಸಿದರೆ ಜನತೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಭರವಸೆ ಇಟ್ಟಿದ್ದಾರೆ.ಗ್ಯಾರಂಟಿ ಯೋಜನೆಗಳಿಂದ ಜನರು ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದಾರೆ. ಅದಷ್ಟು ಬೇಗನೆ ಸಚಿವ ಸಂಪುಟ ಪೂರ್ಣಪ್ರಮಾಣದಲ್ಲಿ ರಚನೆ ಮಾಡಬೇಕು ಎಂದು ಪಕ್ಷದ ವರಿಷ್ಠರು ಹಾಗೂ ಸಿಎಂ,ಡಿಸಿಎಂ ಅವರಿಗೆ ಮನವಿ ಮಾಡಿದ್ದಾರೆ.
ಯಶವಂತರಾಯಗೌಡರಿಗೆ ಸಚಿವ ಸ್ಥಾನ ನೀಡಿ : ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ, ಗಡಿ ಮತಕ್ಷೇತ್ರ ಇಂಡಿಯ ಸರ್ವತೋಮುಖ ಬೆಳವಣಿಗೆಗೆ ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರಿಗೆ ಎರಡನೇ ಅವಧಿಯ ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಪ್ರಶಾಂತ ಕಾಳೆ ಆಗ್ರಹಿಸಿದರು.
ಕೈಗಾರಿಕೆ,ನೀರಾವರಿ,ಶಿಕ್ಷಣ, ಉದ್ಯೋಗ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಯಶವಂತರಾಯಗೌಡರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.