, ಜಮಖಂಡಿ ;ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಸಾರ್ವಜನಿಕ ಸಭೆಯ ರಾಮಲೀಲಾ ಮೈದಾನವನ್ನು ಹೋಮ ಹವನ ಮಾಡುವ ಮೂಲಕ ಶುದ್ಧೀಕರಣ ಮಾಡಿದ ಘಟನೆಯನ್ನು ಜಿಲ್ಲಾ ಯುವ ಕಾಂಗ್ರೆಸ ಅಧ್ಯಕ್ಷ ಕುಮಾರ ಅಲಗೂರು ತೀವ್ರವಾಗಿ ಖಂಡಿಸಿದ್ದಾರೆ. ರಾಷ್ಟ್ರೀಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ರಾಮಲೀಲಾ ಮೈದಾನವನ್ನು ಶುದ್ದಿ ಕರಿಸಿದ ಘಟನೆ ಸಮಾಜಕ್ಕೆ ತೀವ್ರ ನೋವು ಉಂಟು ಮಾಡಿದೆ ಸಂಘ ಪರಿವಾರದ ಕಾರ್ಯಕರ್ತರು ಈ ರೀತಿಯಾಗಿ ನಡೆದು ಕೊಂಡಿರುವದು ಅತ್ಯಂತ ಖಂಡನಾರ್ಹ ಘಟನೆಯಾಗಿದೆ. ಜ್ಯಾತಿ ವ್ಯವಸ್ಥೆಯ ಪೂರ್ವಾಗ್ರಹ ಪೀಡಿತ ಮನೋಭಾವನೆಯನ್ನು ಪ್ರತಿ ಬಿಂಬಿಸುತ್ತದೆ ಅಲ್ಲದೇ ಸಂವಿಧಾನದ ಮೂಲ ಆಶಯದ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ. ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ ಹಾಗೂ ಗೌರವದಿಂದ ಬದುಕುವ ಹಕ್ಕನ್ನು ನೀಡಿದೆ. ವ್ಯಕ್ತಿಯ ಜಾತಿ, ಜನ್ಮ ಅಥವಾ ಸಾಮಾಜಿಕ ಹಿನ್ನೆಲೆಯ ಆಧಾರದ ಮೇಲೆ ಅವರನ್ನು ಅಶುದ್ಧ ಎಂದು ಪರಿಗಣಿಸುವ ಮನೋಭಾವವನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಇಂತಹ ನಡೆಗಳು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವುದರ ಜೊತೆಗೆ ಪ್ರಜಾಪ್ರಭುತ್ವದ ಮೌಲ್ಯಗಳಿಗೂ ಅಪಮಾನ ಮಾಡಿದಂತಾಗುತ್ತದೆ ಎಂದಿದ್ದಾರೆ, ಮಲ್ಲಿಕಾರ್ಜುನ ಖರ್ಗೆ ಅವರು ಹಲವು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿದ್ದು, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಸಂವಿಧಾನಾತ್ಮಕ ಹಕ್ಕುಗಳಿಗಾಗಿ ನಿರಂತರವಾಗಿ ಧ್ವನಿ ಎತ್ತಿಕೊಂಡು ಬಂದಿರುವ ಹಿರಿಯ ನಾಯಕರು. ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಮುಖ ಜವಾಬ್ದಾರಿ ನಿರ್ವಹಿಸುತ್ತಿರುವ ಅವರಿಗೆ ಅವಮಾನ ವಾಗುವಂತೆ ನಡೆದು ಕೊಂಡಿರುವದು ಅಕ್ಷಮ್ಯ ಅಪರಾಧವಾಗಿದೆ.
ಪ್ರತಿಯೊಬ್ಬ ವ್ಯಕ್ತಿಯ ಘನತೆ ಮತ್ತು ಗೌರವವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಜಾತಿ, ಧರ್ಮ, ಜನ್ಮ ಅಥವಾ ಸಾಮಾಜಿಕ ಹಿನ್ನೆಲೆಯ ಆಧಾರದ ಮೇಲೆ ತಾರತಮ್ಯ ಮಾಡುವ ಮನೋಭಾವದ ವಿರುದ್ಧ ಪ್ರಜಾಪ್ರಭುತ್ವವಾದಿಗಳು ಹಾಗೂ ಸಾಮಾಜಿಕ ನ್ಯಾಯದ ಪರ ಹೋರಾಡುವವರು ಒಗ್ಗಟ್ಟಾಗಿ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದ್ದಾರೆ.