ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಮಧ್ಯಪ್ರವೇಶದ ಹೊರತಾಗಿಯೂ ವಿರೋಧ ಪಕ್ಷದ ನಾಯಕರು ಪಟ್ಟು ಸಡಿಲಿಸಲಿಲ್ಲ. ಈ ವಿಷಯವನ್ನು ಪ್ರಸ್ತಾಪಿಸಿದ ತುರುವೇಕೆರೆ ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಮಿತಿಗಳ ಸದಸ್ಯರನ್ನಾಗಿ ಮಾಡಲಾದ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರ ಸಂಬಳ ನೀಡಿದೆ ಎಂದು ಆರೋಪಿಸಿದರು. ಈ ಸಮಿತಿಗಳ ಸದಸ್ಯರಿಗೆ ವೇತನ ನೀಡಲು ತೆರಿಗೆದಾರರ ಹಣವನ್ನು ಪೋಲು ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.
ಎಂಟಿ ಕೃಷ್ಣಪ್ಪ ಆರೋಪವನ್ನು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬೆಂಬಲಿಸಿ, ಸರ್ಕಾರ ಈ ಸಮಿತಿಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ಇದು ಬಿಸಿ ಚರ್ಚೆಗೆ ಕಾರಣವಾಯಿತು. ಸ್ಪೀಕರ್ ಯುಟಿ ಖಾದರ್ ಅವರು ಸದನವನ್ನು ಮುಂದೂಡಬೇಕಾಯಿತು. ಅಧಿವೇಶನ ಪುನರಾರಂಭವಾದಾಗಲೂ ಗದ್ದಲ ಮುಂದುವರೆಯಿತು. ಸದನವನ್ನು ಮತ್ತೆ ಮುಂದೂಡಿದ ಖಾದರ್ ಬಳಿಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಆರ್ ಅಶೋಕ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ನಾಯಕ ಸಿಬಿ ಸುರೇಶ್ಬಾಬು ಅವರೊಂದಿಗೆ ಸಮನ್ವಯ ಸಭೆ ನಡೆಸಿದರು.
ಅಧಿವೇಶನ ಪುನರಾರಂಭವಾದಾಗ, ವಿರೋಧ ಪಕ್ಷಗಳ ಶಾಸಕರು ಸ್ಪೀಕರ್ ಪೀಠದ ಬಳಿಗೆ ನುಗ್ಗಿ ಮತ್ತೆ ಧರಣಿ ನಡೆಸಿದರು. ಕಾಂಗ್ರೆಸ್ ಸರ್ಕಾರವು ತೆರಿಗೆದಾರರ ಹಣವನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು. ಮತ್ತೊಂದೆಡೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ವಿರೋಧ ಪಕ್ಷಗಳು ವಿರೋಧಿಸುತ್ತಿವೆ ಎಂದು ಕಾಂಗ್ರೆಸ್ ಶಾಸಕರು ಆರೋಪಿಸಿದರು. ಇದರಿಂದಾಗಿ ಸ್ಪೀಕರ್ ಸದನವನ್ನು ದಿನದ ಮಟ್ಟಿಗೆ ಮುಂದೂಡಿದರು.