ಕೊಪ್ಪಳ, ಜೂನ್ ,20 : ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ನಿವಾಸಿ ತಿಮ್ಮಾರೆಡ್ಡಿ ಅವರು ತಮ್ಮ ಪತ್ನಿ ಹುಲಿಗೆಮ್ಮ ಅವರ ಕಿಡ್ನಿ ಚಿಕಿತ್ಸೆಗೆ ಆರ್ಥಿಕ ನೆರವು ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಪತ್ನಿ ಹುಲಿಗೆಮ್ಮ ಅವರ ಎರಡು ಕಿಡ್ನಿಗಳು ಸಂಪೂರ್ಣವಾಗಿ ವೈಫಲ್ಯಗೊಂಡಿದ್ದು, ವಾರದಲ್ಲಿ ಎರಡು ಬಾರಿ ಡಯಾಲಿಸಿಸ್ ಮಾಡಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ತಿಳಿಸಿದರು. ವೈದ್ಯರ ಸಲಹೆಯಂತೆ ಡಯಾಲಿಸಿಸ್ ಚಿಕಿತ್ಸೆ ನಿರಂತರವಾಗಿ ಮುಂದುವರಿಯದಿದ್ದರೆ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆಯಿದೆ ಎಂದು ಹೇಳಿದರು.
ಈ ಸಂಬಂಧ ಹುಬ್ಬಳ್ಳಿ, ಧಾರವಾಡ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ವೈದ್ಯರನ್ನು ಸಂಪರ್ಕಿಸಿದ್ದು, ಕಿಡ್ನಿ ಕಸಿ ಮಾಡಿದರೆ ಆರೋಗ್ಯ ಸುಧಾರಿಸುವ ಸಾಧ್ಯತೆ ಇದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ ಎಂದು ವಿವರಿಸಿದರು.
ಆದರೆ ಕುಟುಂಬವು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು, ಕಿಡ್ನಿ ಕಸಿ ಹಾಗೂ ಇತರೆ ಚಿಕಿತ್ಸೆಗಳಿಗಾಗಿ ಸುಮಾರು 10 ಲಕ್ಷ ವೆಚ್ಚವಾಗಲಿದೆ. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ತಮಗೆ ಇಬ್ಬರು ಹೆಣ್ಣು ಮಕ್ಕಳ ವಿದ್ಯಾಭ್ಯಾಸದ ಜೊತೆಗೆ ಚಿಕಿತ್ಸಾ ವೆಚ್ಚವನ್ನು ಭರಿಸುವುದು ಅತ್ಯಂತ ಕಷ್ಟಕರವಾಗಿದೆ ಎಂದು ನೋವು ತೋಡಿಕೊಂಡರು.
ಹೀಗಾಗಿ ದಾನಿಗಳು, ಸಂಘ,ಸಂಸ್ಥೆಗಳು ಹಾಗೂ ಸಾರ್ವಜನಿಕರು ಮಾನವೀಯ ನೆಲೆಯಲ್ಲಿ ನೆರವು ನೀಡುವಂತೆ ಅವರು ವಿನಂತಿಸಿದರು. ನೆರವು ನೀಡಲು ಇಚ್ಛಿಸುವವರು ಫೋನ್ ಪೇ ಸಂಖ್ಯೆ : 7795061761 ಗೆ ಆರ್ಥಿಕ ಸಹಾಯ ಮಾಡಬಹುದು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪತ್ನಿ,ಮತ್ತು ಮಕ್ಕಳು ಉಪಸ್ಥಿತರಿದ್ದರು.
