ಬಾಗಲಕೋಟೆ : ಆಗಸ್ಟ ೧೭ : ಕೆನರಾ ಬ್ಯಾಂಕ್ನ ಸಿ.ಎಸ್.ಆರ್ ಅನುದಾನದಡಿ ಕೆನರಾ ವಿದ್ಯಾ ಜ್ಯೋತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ೧೮೦ಕ್ಕೂ ಹೆಚ್ಚು ಬಾಲಕಿಯರಿಗೆ ವಿದ್ಯಾರ್ಥಿ ವೇತನದ ಚೆಕ್ನ್ನು ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ನೀಡಲಾಯಿತು.
ಕೆನರಾ ಬ್ಯಾಂಕ್ನ ಪ್ರಾದೇಶಿಕ ವ್ಯವಸ್ಥಾಪಕ ಯೋಗೇಶ ಪೂಜಾರ, ಲೀಡ್ ಬ್ಯಾಂಕ್ನ ಮ್ಯಾನೇಜರ ರಾಜಕುಮಾರ ಹೂಗಾರ ಅವರು ಸಿ.ಎಸ್.ಆರ್ ಅನುದಾನದಡಿ ಒಟ್ಟು ೭.೨೦ ಲಕ್ಷ ರೂ.ಗಳ ವಿದ್ಯಾರ್ಥಿ ವೇತನದ ಚೆಕ್ನ್ನು ಇತ್ತೀಚೆಗೆ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸುವ ಮೂಲಕ ಜಿಲ್ಲೆಯ ೨೦ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ೧೮೦ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಕೆನರಾ ಬ್ಯಾಂಕ್ ವತಿಯಿಂದ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ.
ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಪ್ರತಿಭಾವಂತ ಬಾಲಕಿಯರನ್ನು ಈ ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೇರಿದ ಉತ್ತಮ ಶ್ರೇಣಿ ಪಡೆದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ೫ ರಿಂದ ೭ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ೩ ಸಾವಿರ ರೂ, ೮ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ೫ ಸಾವಿರ ರೂ.ಗಳ ವಿದ್ಯಾರ್ಥಿ ವೇತನ ಮೊತ್ತವನ್ನು ನೇರವಾಗಿ ವಿದ್ಯಾರ್ಥಿನಿಯರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡುವ ಮೂಲಕ ನೆರವು ನೀಡಲಾಗುತ್ತಿದೆ.
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ಬಾಲಕಿಯರಿಗೆ ಶೈಕ್ಷಣಿಕ ನೆರವು ನೀಡುವ ಮೂಲಕ ಅವರ ಶಿಕ್ಷಣ ಮುಂದುವರಿಕೆಗೆ ಪ್ರೋತ್ಸಾಹ ನೀಡುವುದು ಯೋಜನೆ ಪ್ರಮುಖ ಉದ್ದೇಶವಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕೆನರಾ ಬ್ಯಾಂಕ್ ಕೈಗೊಂಡಿರುವ ಈ ಸಿಎಸ್ಆರ್ ಉಪ ಕ್ರಮವು ಬಾಲಕಿಯರ ಶೈಕ್ಷಣಕ್ಕೆ ಮತ್ತಷ್ಟು ಉತ್ತೇಜನ ನೀಡುವುದರ ಜೊತೆಗೆ ಆರ್ಥಿಕ ಕಾರಣಗಳಿಂದ ಶಿಕ್ಷಣಕ್ಕೆ ಅಡ್ಡಿಯಾಗದಂತೆ ಸಹಕಾರ ನೀಡಿದೆ.
೨ ಗ್ರಾಮ ದತ್ತು ಪಡೆದ ಕೆನರಾ ಬ್ಯಾಂP ಕೆನರಾ ಬ್ಯಾಂಕ್ ತನ್ನ ಸಿಎಸ್ಆರ್ ಚಟುವಟಿಕೆಯಡಿ ಬಾಗಲಕೋಟೆ ತಾಲೂಕು ಹಾಗೂ ಬೀಳಗಿ ತಾಲೂಕಿಗೆ ತಲಾ ಒಂದು ಗ್ರಾಮಗಳನ್ನು ದತ್ತು ಪಡೆದು ಶಾಲಾ ಕಟ್ಟಡ ನಿರ್ಮಾಣ, ದುರಸ್ಥಿ ಹಾಗೂ ಗ್ರಾಮಕ್ಕೆ ವೈದ್ಯಕೀಯ ಉಪಕರಣಗಳನ್ನು ಒದಗಿಸಲು ತಲಾ ೧೦ ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲು ಕೆನರಾ ಬ್ಯಾಂಕ್ ನಿರ್ಧರಿಸಿದೆ. ಇದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವುದರ ಜೊತೆಗೆ ಗ್ರಾಮಸ್ಥರಿಗೆ ಅಗತ್ಯ ಆರೋಗ್ಯ ಸೇವೆಗಳನ್ನು ಸುಲಭವಾಗಿ ದೊರಕಿಸುವ ನಿಟ್ಟಿನಲ್ಲಿ ಕೆನರಾ ಬ್ಯಾಂಕ್ ತನ್ನ ಸಾಮಾಜಿಕ ಹೊಣೆಗಾರಿಕೆಯನ್ನು ನಿರ್ವಹಿಸುತ್ತಿದೆ.