ಬಳ್ಳಾರಿ, ಸೆ. 08: ನಗರದ ರೂಪನಗುಡಿ ರಸ್ತೆಯಲ್ಲಿರುವ ಶ್ರೀ ವರಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ರಥೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತಿಭಾವದಿಂದ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಮುಂಜಾನೆಯಿಂದಲೇ ಪುಷ್ಪಾರ್ಚನೆ, ಕುಂಕುಮಾರ್ಚನೆ, ವಿಶೇಷ ಪೂಜೆ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೆಳಗ್ಗೆಯಿಂದಲೇ ನೂರಾರು ಭಕ್ತರು ಹೂವು, ಹಣ್ಣು-ಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳೊಂದಿಗೆ ದೇವಸ್ಥಾನಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದು ಭಕ್ತಿಯನ್ನು ಸಮರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ವರಬಸವೇಶ್ವರ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಭು ಉದ್ಧಿ, ಪ್ರತಿವರ್ಷ ಶ್ರಾವಣ ಮಾಸದ ಕೊನೆಯ ಸೋಮವಾರದಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವವನ್ನು ಆಚರಿಸಲಾಗುತ್ತಿದೆ. ದೇವಸ್ಥಾನವು ನೂರಾರು ವರ್ಷಗಳ ಇತಿಹಾಸ ಹೊಂದಿದ್ದು, ಶತಮಾನಕ್ಕೂ ಹಿಂದೆಯೇ ನಮ್ಮ ಪೂರ್ವಜರಿಂದ ನಿರ್ಮಾಣಗೊಂಡಿದೆ. ದೇವಸ್ಥಾನವನ್ನು ಪುನರ್ಜೀವನಗೊಳಿಸಿ ನೂತನವಾಗಿ ಅಭಿವೃದ್ಧಿಪಡಿಸುವ ಉದ್ದೇಶವಿದ್ದು, ಇದಕ್ಕೆ ಭಕ್ತರು ಕೈಜೋಡಿಸಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ದೇವಸ್ಥಾನದಲ್ಲಿ ಯಾವುದೇ ಜಾತಿ-ಧರ್ಮದ ತಾರತಮ್ಯವಿಲ್ಲ. ಎಲ್ಲ ಸಮುದಾಯಗಳ ಭಕ್ತರು ಇಲ್ಲಿಗೆ ಆಗಮಿಸಿ ಸ್ವಾಮಿಯ ದರ್ಶನ ಪಡೆದು ಸೇವೆ ಸಲ್ಲಿಸುತ್ತಿದ್ದಾರೆ. ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ರಾಜಕುಮಾರ್ (ರಾಜಣ್ಣ) ಮನವಿ ಮಾಡಿದರು.
ದೇವಸ್ಥಾನದ ಮೇಲ್ವಿಚಾರಕ ಎರಿಸ್ವಾಮಿ ಮಾತನಾಡಿ, ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀ ವರಬಸವೇಶ್ವರ ಸ್ವಾಮಿಯ ಕೃಪಾಶೀರ್ವಾದಕ್ಕೆ ಪಾತ್ರರಾದ ಎಲ್ಲ ಭಕ್ತರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಗನಕಲ್ಲು ಲಿಂಗರಾಜ್, ತೆಂಗಿನಕಾಯಿ ರಾಜಣ್ಣ, ಶೇಷಪ್ಪ, ಮಂಜು, ಗಂಗಾ ಸೇರಿದಂತೆ ಹಲವು ಭಕ್ತರು ಉಪಸ್ಥಿತರಿದ್ದರು.