ಬಳ್ಳಾರಿ, ಮೇ.20..: ಕಳೆದ ಐದು ವರ್ಷಗಳ ಅವಧಿಯಲ್ಲಿ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ, ಮೂಲಸೌಕರ್ಯ, ಡಿಜಿಟಲ್ ವ್ಯವಸ್ಥೆ ಹಾಗೂ ವಿದ್ಯಾರ್ಥಿ ಕಲ್ಯಾಣ ಕ್ಷೇತ್ರಗಳಲ್ಲಿ ಮಹತ್ವದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಕುಲಪತಿ ಎಂ. ಮುನಿರಾಜು ಹೇಳಿದರು.
ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಸ್ಆರ್ ನಿಧಿಯ ಸಹಾಯದಿಂದ ಜಿಮ್ ರೂಮ್ ಹಾಗೂ ಕ್ಯಾಂಟೀನ್ ನಿರ್ಮಿಸಲಾಗಿದೆ ಎಂದು ತಿಳಿಸಿದರು.
ಸುಮಾರು 23 ಕೋಟಿ ರೂಪಾಯಿ ವೆಚ್ಚದಲ್ಲಿ ಮಲ್ಟಿ ಯುಟಿಲಿಟಿ ಕಾಂಪ್ಲೆಕ್ಸ್ ನಿರ್ಮಾಣವಾಗಿದ್ದು, ಅದರಲ್ಲಿ ಆಸ್ಪತ್ರೆ, ಬ್ಯಾಂಕ್, ಜೆರಾಕ್ಸ್ ಕೇಂದ್ರ ಮತ್ತು ಎಟಿಎಂ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.
1.80 ಕೋಟಿ ರೂಪಾಯಿ ವೆಚ್ಚದಲ್ಲಿ ಸೋಶಿಯಲ್ ಸೈನ್ಸ್, ಕಂಪ್ಯೂಟರ್ ಸೈನ್ಸ್ ಹಾಗೂ ಕಾಮರ್ಸ್ ವಿಭಾಗಗಳ ಕಟ್ಟಡಗಳನ್ನು ನವೀಕರಿಸಲಾಗಿದೆ. ರಾಜ್ಯಪಾಲರ ವಿಶೇಷ ಅನುದಾನದಡಿ ವಿಶ್ವವಿದ್ಯಾಲಯದ ಕ್ಯಾಂಪಸ್ನ್ನು ಸಂಪೂರ್ಣ ಸೌರಶಕ್ತಿ ಆಧಾರಿತ ವ್ಯವಸ್ಥೆಗೆ ಪರಿವರ್ತಿಸಲಾಗಿದ್ದು, ಇದರಿಂದ ಪ್ರತಿಮಾಸ ಸುಮಾರು 33 ಲಕ್ಷ ರೂಪಾಯಿ ವಿದ್ಯುತ್ ವೆಚ್ಚ ಉಳಿತಾಯವಾಗುತ್ತಿದೆ ಎಂದು ವಿವರಿಸಿದರು.
ವಿದ್ಯಾರ್ಥಿಗಳ ಕಲಿಕಾ ವಾತಾವರಣವನ್ನು ಸುಧಾರಿಸಲು ಎಸಿ ಸೌಲಭ್ಯ ಹೊಂದಿದ ಸ್ಮಾರ್ಟ್ ಕ್ಲಾಸ್ ರೂಂಗಳನ್ನು ನಿರ್ಮಿಸಲಾಗಿದೆ. ಜೊತೆಗೆ ಹೊಸ ಆಡಿಟೋರಿಯಂ ಕಾಮಗಾರಿಯೂ ಪ್ರಗತಿಯಲ್ಲಿದೆ ಎಂದರು.
ವಿದ್ಯಾರ್ಥಿಗಳ ಉದ್ಯೋಗಾವಕಾಶ ಹೆಚ್ಚಿಸಲು “ಕ್ಯಾಂಪಸ್ ಟು ಕೆರಿಯರ್” ಕಾರ್ಯಕ್ರಮ ಜಾರಿಗೊಳಿಸಲಾಗಿದ್ದು, ಹೊಸ ಯುಗದ ಶಿಕ್ಷಣ ಅಗತ್ಯತೆಗಳಿಗೆ ಅನುಗುಣವಾಗಿ ಮೆಡಿಕಲ್ ಫಿಸಿಕ್ಸ್ ಸೇರಿದಂತೆ ಹಲವು ನೂತನ ಕೋರ್ಸ್ಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು.
ಕ್ರೀಡೆ ಮತ್ತು ಮಾಧ್ಯಮ ಶಿಕ್ಷಣಕ್ಕೂ ಆದ್ಯತೆ ನೀಡಲಾಗಿದ್ದು, ವಿಶ್ವವಿದ್ಯಾಲಯದಲ್ಲಿ ನೂತನ ಕ್ರೀಡಾಂಗಣ ನಿರ್ಮಿಸಲಾಗಿದೆ. ಎಂಎ ಜರ್ನಲಿಸಂ ವಿಭಾಗಕ್ಕೆ 4 ಲಕ್ಷ ರೂಪಾಯಿ ವೆಚ್ಚದಲ್ಲಿ ಕ್ಯಾಮೆರಾ ಹಾಗೂ ಡ್ರೋನ್ ವಿತರಿಸಲಾಗಿದ್ದು, ಸಮುದಾಯ ರೇಡಿಯೋ ಆರಂಭಿಸುವ ಕಾರ್ಯವೂ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ತಾಂತ್ರಿಕ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ನಾಲ್ಕು ಕೋರ್ಸ್ಗಳ ವಿದ್ಯಾರ್ಥಿಗಳಿಗೆ 180 ಕಂಪ್ಯೂಟರ್ಗಳನ್ನು ಒದಗಿಸಲಾಗಿದೆ. ವಿಶ್ವವಿದ್ಯಾಲಯದ ವೆಬ್ಸೈಟ್ ನವೀಕರಣ ಮಾಡಿ, ಎಲ್ಲಾ ಮಾಹಿತಿ ಡಿಜಿಟಲ್ ರೂಪದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಎನ್ಎಂಡಿಸಿ ಸಹಕಾರದೊಂದಿಗೆ 1.5 ಕೋಟಿ ರೂಪಾಯಿ ವೆಚ್ಚದಲ್ಲಿ ಡೈನಿಂಗ್ ಹಾಲ್ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಮುಂದಿನ ತಿಂಗಳಲ್ಲಿ ಉದ್ಘಾಟನೆಗೊಳ್ಳಲಿದೆ. ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಲಘು ಉಪಹಾರ ವಿತರಿಸುವ ಯೋಜನೆಯನ್ನೂ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.
ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಸಭಾಂಗಣದಲ್ಲಿ 50 ಕಂಪ್ಯೂಟರ್ಗಳನ್ನು ಅಳವಡಿಸಿ ವಿಶೇಷ ತರಬೇತಿ ಕೋರ್ಸ್ಗಳನ್ನು ನಡೆಸಲಾಗುತ್ತಿದೆ. ಸಂಪೂರ್ಣ ಡಿಜಿಟಲ್ ಲೈಬ್ರರಿ ವ್ಯವಸ್ಥೆ ರೂಪುಗೊಂಡಿದ್ದು, ಪರೀಕ್ಷಾ ಕೇಂದ್ರಗಳ ಸಮಸ್ಯೆಗಳನ್ನೂ ಪರಿಹರಿಸಲಾಗಿದೆ ಎಂದು ಹೇಳಿದರು.
ವಿಶ್ವವಿದ್ಯಾಲಯದಲ್ಲಿ ಎಐ ಲ್ಯಾಬ್ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕೆಕೆಆರ್ಡಿಬಿ ಹಾಗೂ ಕೆ-ಎಂಇಆರ್ಸಿ ಅನುದಾನಗಳನ್ನು ಅಭಿವೃದ್ಧಿ ಕಾಮಗಾರಿಗಳಿಗೆ ಸಮರ್ಪಕವಾಗಿ ಬಳಸಲಾಗಿದೆ ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ಕೆರೆ ನೀರು ನಿರ್ವಹಣೆ ಹಾಗೂ ಸ್ವಚ್ಛತಾ ವ್ಯವಸ್ಥೆ ಅಭಿವೃದ್ಧಿಗೆ ವಿಶ್ವವಿದ್ಯಾಲಯದಿಂದ ಸಹಕಾರ ನೀಡಲಾಗಿದೆ ಎಂದು ತಿಳಿಸಿದ ಅವರು, ಕಳೆದ ಐದು ವರ್ಷಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಪರೀಕ್ಷಾಂಗ ಕುಲಸಚಿವ ಎಂ.ಎನ್. ಸಾಲಿ ಹಾಗೂ ಆಡಳಿತ ಕುಲಸಚಿವ ಲೋಕೇಶ್,PRO ಸುನೀಲ್ ಸೇರಿದಂತೆ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
