ಬಳ್ಳಾರಿ, ಜೂ.26: ಸುಮಾರು 25 ವರ್ಷಗಳ ಬಳಿಕ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಅರ್ಹ ನಾಗರಿಕರು ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಕರೆ ನೀಡಿದರು.
ನಗರದ ಅಂಥೋನಿ ಹಾಲ್ನಲ್ಲಿ ಗುರುವಾರ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಮತದಾರರ ಹಕ್ಕು ರಕ್ಷಣೆಗಾಗಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರೂ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.
ಬಿಎಲ್ಒಗಳಿಗೆ ಬಣ್ಣದ ಭಾವಚಿತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಅಲೆಮಾರಿ ಸಮುದಾಯದವರು ಆರು ತಿಂಗಳ ವಾಸಸ್ಥಳ ಪ್ರಮಾಣ ಪತ್ರ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.
ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನಗಳು ನಡೆಯುತ್ತಿದ್ದು, ಎಸ್ಐಆರ್ ಪ್ರಕ್ರಿಯೆಯಿಂದ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಕಾಂಗ್ರೆಸ್ ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಪಿಂಚಣಿ ಪತ್ರ, ಎಲ್ಐಸಿ ದಾಖಲೆ, ಜನನ ಪ್ರಮಾಣ ಪತ್ರ, ಪಾಸ್ಪೋರ್ಟ್, ಶೈಕ್ಷಣಿಕ ದಾಖಲೆಗಳು, ಜಾತಿ ಪ್ರಮಾಣ ಪತ್ರ, ವಸತಿ ಮತ್ತು ಜಮೀನು ದಾಖಲೆಗಳು ಸೇರಿದಂತೆ ವಿವಿಧ ದಾಖಲೆಗಳ ಮೂಲಕ ಅರ್ಹತೆ ದೃಢೀಕರಿಸಬಹುದಾಗಿದೆ ಎಂದು ತಿಳಿಸಿದರು.
ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಕರಡು ಮತದಾರರ ಪಟ್ಟಿಯನ್ನು ಆನ್ಲೈನ್ನಲ್ಲಿ ಪರಿಶೀಲಿಸಲು ಅವಕಾಶ ಕಲ್ಪಿಸಲಾಗಿದ್ದು, ತಪ್ಪುಗಳಿದ್ದಲ್ಲಿ ತಿದ್ದುಪಡಿ ಸಲ್ಲಿಸಬಹುದು. ಅಂತಿಮ ಮತದಾರರ ಪಟ್ಟಿಯನ್ನು ನವೆಂಬರ್ ತಿಂಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಗಾದೆಪ್ಪ, ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ್ ಬಿ. ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯ ಶರಣಪ್ಪ ಮಟ್ಟೂರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್, ಪಾಲಿಕೆ ಸದಸ್ಯರಾದ ಪ್ರಭಂಜನ್ ಕುಮಾರ್, ನಾಗಲಕೇರಿ ಗೋವಿಂದ, ಕಾಂಗ್ರೆಸ್ ಮುಖಂಡರಾದ ಮಾನಯ್ಯ, ಬೋಯಾಪಾಟಿ ವಿಷ್ಣು, ಗುಮ್ಮುನೂರ್ ಜಗನ್ನಾಥ್, ನಾಗರಾಜ್, ಗೂಡ್ಲು ರವಿ, ಚಾನಾಳ್ ಶೇಖರ್, ಬೆಣಕಲ್ ಬಸವರಾಜ್ ಹಾಗೂ ಮಹಿಳಾ ಅಧ್ಯಕ್ಷೆ ಎಂ.ಎಸ್ ಮಂಜುಳಾ ಅವರು ಉಪಸ್ಥಿತರಿದ್ದರು.
