ಕಾಗವಾಡ : ಕಿತ್ತೂರು ಸಂಸ್ಥಾನವು ಬ್ರಿಟಿಷರ ವಿರುದ್ಧ ನಡೆಸಿದ ಹೋರಾಟದ ಪರಿ ಭಾರತೀಯ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಅತ್ಯಂತ ಅದ್ಭುತ ಹಾಗೂ ಸ್ಫೂರ್ತಿದಾಯಕ ಅಧ್ಯಾಯವಾಗಿದೆ ಎಂದು ಸಂಪನ್ಮೂಲ ವ್ಯಕ್ತಿಗಳಾದ ಯ.ರು. ಪಾಟೀಲ ಅಭಿಪ್ರಾಯಸಿದರು. ಕಿತ್ತೂರ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ. ರಾಣಿ ಚೆನ್ನಮ್ಮ ಅಧ್ಯಯನ ಪೀಠ ಹಾಗೂ ಶಿವಾನಂದ ಮಹಾವಿದ್ಯಾಲಯ ಕಾಗವಾಡ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ಸಂಸ್ಥಾನ ಮತ್ತು ರಾಣಿ ಚೆನ್ನಮ್ಮ ಅವರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡುತ್ತಾ ವೇತನಕ್ಕಾಗಿ ದುಡಿಯುತ್ತಿದ್ದ ಬ್ರಿಟಿಷರ ಸೈನಿಕರ ಎದುರು ದೇಶಪ್ರೇಮವನ್ನೇ ಜೀವದ ಉಸಿರಾಗಿಸಿಕೊಂಡು ಹೋರಾಡಿದ ಕಿತ್ತೂರಿನ ಸೈನಿಕರ ಸಾಹಸ, ಶೌರ್ಯ ಮತ್ತು ತ್ಯಾಗ ಇತಿಹಾಸದಲ್ಲಿ ಅಜರಾಮರವಾಗಿದೆ ಎಂದು ಅಭಿಪ್ರಾಯಪಟ್ಟರು. ಮುಂದುವರೆದು ಅವರು ಕಿತ್ತೂರು ಸಂಸ್ಥಾನದ ಇತಿಹಾಸದಲ್ಲಿ ಶೌರ್ಯ, ಧೈರ್ಯ, ತ್ಯಾಗ ಮತ್ತು ದೇಶಪ್ರೇಮದ ಅನೇಕ ಕಥೆಗಳು ಜೀವಂತವಾಗಿವೆ. ಕಿತ್ತೂರಿನ ಸಾಧನೆಗಳು ಕೇವಲ ಕಿತ್ತೂರು ಉತ್ಸವಕ್ಕೆ ಮಾತ್ರ ಸೀಮಿತವಾಗದೆ, ಅವುಗಳ ಮಹತ್ವವನ್ನು ದೇಶ-ವಿದೇಶಗಳಿಗೆ ಪರಿಚಯಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಕಿತ್ತೂರು ರಾಣಿ ಚನ್ನಮ್ಮ ಹಾಗೂ ಕಿತ್ತೂರು ಸಂಸ್ಥಾನದ ಇತಿಹಾಸವು ಕೇವಲ ನಮ್ಮ ಭಾಗಕ್ಕೆ ಸೀಮಿತವಾಗದೆ, ಅವರ ಶೌರ್ಯ ಮತ್ತು ದೇಶಪ್ರೇಮದ ಸಂದೇಶವನ್ನು ಪ್ರತಿಯೊಬ್ಬರಿಗೂ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ರಾಣಿ ಚನ್ನಮ್ಮ ಅಧ್ಯಯನ ಪೀಠದ ಸಂಯೋಜಕರಾದ ಡಾ. ಪೂಜಾ ಹಲ್ಯಾಳ ಹೇಳಿದರು.
ಕಿತ್ತೂರು ರಾಣಿ ಚನ್ನಮ್ಮ ಅವರು ನಮ್ಮ ನಾಡಿನ ಅಸ್ಮಿತೆಯ ಪ್ರತೀಕವಾಗಿದ್ದು, ಶೌರ್ಯ, ಧೈರ್ಯ ಮತ್ತು ತ್ಯಾಗದ ಪ್ರತಿರೂಪವಾಗಿ ನಿಂತಿರುವ ಪ್ರಬಲ ವ್ಯಕ್ತಿತ್ವ ಅವರದು ಎಂದು ರಾಣಿ ಚನ್ನಮ್ಮ ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಎಸ್.ಎಂ. ಗಂಗಾಧರಯ್ಯ ಹೇಳಿದರು. ಅವರ ಜೀವನ ಹಾಗೂ ಹೋರಾಟವು ಇಂದಿನ ಯುವಜನತೆಗೆ, ವಿಶೇಷವಾಗಿ ವಿದ್ಯಾರ್ಥಿಗಳಿಗೆ, ದೇಶಪ್ರೇಮ ಮತ್ತು ಧೈರ್ಯದ ಸ್ಫೂರ್ತಿಯನ್ನು ನೀಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.ಕಿತ್ತೂರು ರಾಣಿ ಚನ್ನಮ್ಮ ಅವರಂತಹ ವೀರ ಮಹಿಳೆಯರ ಜೀವನ, ಹೋರಾಟ ಮತ್ತು ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯವು ಇಂತಹ ವಿಶೇಷ ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಸ್.ಪಿ. ತಳವಾರ ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಆರಂಭದಲ್ಲಿ ಅನನ್ಯಾ ಕುಲಕರ್ಣಿ ಪ್ರಾರ್ಥಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಎ.ಎಂ. ಜಕ್ಕಣ್ಣವರ ಸ್ವಾಗತಿಸಿದರು. ಪ್ರೊ. ಸುನಿತಾ ದೇವಮಾನೆ ವಂದಿಸಿದರು. ಪ್ರೊ. ಎಸ್.ಎಸ್. ಫಡತರೆ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ವೇದಿಕೆ ಮೇಲೆ ಐಕ್ಯೂಎಸಿ ಸಂಯೋಜಕರಾದ ಪ್ರೊ ಬಿ ಡಿ ಧಾಮಣ್ಣವರ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.