ಬಳ್ಳಾರಿ, ಜೂನ್ 03; ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ “ರೈತಣ್ಣನ ಊಟ ಯೋಜನೆ”ಯಡಿ ಇಂದು ರೈತ ಭವನದಲ್ಲಿ ಅನ್ನದಾತರಿಗೆ ವಿಶೇಷ ಸಿಹಿ ಖಾದ್ಯ ಹಾಗೂ ಸಂಪೂರ್ಣ ಊಟದ ವ್ಯವಸ್ಥೆ ಮಾಡಲಾಯಿತು.
ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷರು, ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಗುರ್ಹುಕುಂ ಸಮಿತಿ ಅಧ್ಯಕ್ಷರಾಗಿರುವ ಹೆಚ್. ತಿಮ್ಮನಗೌಡ ಅವರು ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಇಂದಿನ ಊಟದ ಸಂಪೂರ್ಣ ವೆಚ್ಚವನ್ನು ವಹಿಸಿಕೊಂಡು ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದರು.
ಈ ಸಂದರ್ಭದಲ್ಲಿ ರೈತ ಭವನಕ್ಕೆ ಆಗಮಿಸಿದ ರೈತರು ಹಾಗೂ ಸಾರ್ವಜನಿಕರು ಹೆಚ್. ತಿಮ್ಮನಗೌಡ ಅವರ ಈ ಸೇವಾ ಮನೋಭಾವವನ್ನು ಶ್ಲಾಘಿಸಿದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್, ಹಾಗೂ ಗೌರವ ಕಾರ್ಯದರ್ಶಿಗಳಾದ ಕೆ ಸಿ ಸುರೇಶ್ ಬಾಬು, ಪದಾಧಿಕಾರಿಗಳು ಹಾಗೂ ಸದಸ್ಯರು ತಿಮ್ಮನಗೌಡ ಅವರಿಗೆ ಹಾರ್ದಿಕ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿ, ಅವರ ಸಾಮಾಜಿಕ ಸೇವಾ ಕಾರ್ಯಗಳು ಇನ್ನಷ್ಟು ವಿಸ್ತರಿಸಲಿ ಎಂದು ಹಾರೈಸಿದರು.
ರೈತಣ್ಣನ ಊಟ ಯೋಜನೆಯ ಮೂಲಕ ಪ್ರತಿದಿನ ನೂರಾರು ರೈತರಿಗೆ ಉಚಿತ ಹಾಗೂ ಗುಣಮಟ್ಟದ ಆಹಾರವನ್ನು ನೀಡಲಾಗುತ್ತಿದ್ದು, ಈ ಯೋಜನೆಗೆ ವಿವಿಧ ದಾನಿಗಳು ಮತ್ತು ಸಮಾಜಸೇವಕರು ನಿರಂತರವಾಗಿ ಸಹಕಾರ ನೀಡುತ್ತಿದ್ದಾರೆ.
