ನಾಲತವಾಡ: ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ವಿವಿಧ ಮೂಲಭೂತ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ. ಸೌದಾಗರ ಅವರಿಗೆ ಮನವಿ ಸಲ್ಲಿಸಿದರು.
ಮನವಿಯಲ್ಲಿ ಶ್ರೀ ಶರಣ ವೀರೇಶ್ವರ ಸಮುದಾಯ ಭವನಕ್ಕೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಲಾಗಿದೆ. ನಾಗಬೇನಾಳ ಗ್ರಾಮದಲ್ಲಿ ನಿರ್ಮಿಸಿರುವ ಘನತ್ಯಾಜ್ಯ ವಿಲೇವಾರಿ ಘಟಕದ ತಡೆಗೋಡೆ ಹಾನಿಗೊಳಗಾದ ಪ್ರಕರಣದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಘಟಕಕ್ಕೆ ಸಂಪರ್ಕ ರಸ್ತೆ ನಿರ್ಮಿಸಬೇಕು ಎಂದು ಆಗ್ರಹಿಸಲಾಗಿದೆ.
ಎಸ್ಎಸ್ಪಿ ವಿಶೇಷ ಅನುದಾನದಲ್ಲಿ ನಾಲತವಾಡ ಬಸ್ ನಿಲ್ದಾಣದ ಉತ್ತರ ಹಾಗೂ ಪೂರ್ವ ಭಾಗದಲ್ಲಿ ವ್ಯಾಪಾರ ಮಳಿಗೆಗಳನ್ನು ನಿರ್ಮಿಸಲು ಉದ್ದೇಶಿಸಿರುವುದರಿಂದ ಭವಿಷ್ಯದಲ್ಲಿ ಮುಖ್ಯ ರಸ್ತೆ ಹಾಗೂ ಬೈಪಾಸ್ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಸೂಕ್ತ ಸ್ಥಳವನ್ನು ಗುರುತಿಸಿ ಮಳಿಗೆಗಳನ್ನು ನಿರ್ಮಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಮುದ್ದೇಬಿಹಾಳ ಮುಖ್ಯ ರಸ್ತೆಯಲ್ಲಿರುವ ಪಶು ವೈದ್ಯಕೀಯ ಕೇಂದ್ರದಿಂದ ನಾರಾಯಣಪುರ ರಸ್ತೆಯ ಪೆಟ್ರೋಲ್ ಬಂಕ್ವರೆಗೆ ಡಿವೈಡರ್ ಕಾಮಗಾರಿ ಪೂರ್ಣಗೊಂಡಿದ್ದು, ಅದರ ಮಧ್ಯ ಭಾಗದಲ್ಲಿ ಗಿಡಗಳನ್ನು ನೆಟ್ಟು, ರಾತ್ರಿ ವೇಳೆ ನಿರಂತರವಾಗಿ ವಿದ್ಯುತ್ ದೀಪಗಳು ಬೆಳಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಇದೇ ವೇಳೆ ಖಾನಭಾವಿ ಓಣಿಯ ಜನವಸತಿ ಪ್ರದೇಶದಲ್ಲಿ ಕೊಳಚೆ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಕೊಳಚೆ ನೀರಿನ ಸಮಸ್ಯೆ ನಿವಾರಿಸಿ ಸ್ವಚ್ಛ ಪರಿಸರ ನಿರ್ಮಿಸಬೇಕು ಎಂದು ಮನವಿ ಮಾಡಲಾಗಿದೆ. ಮನವಿಯಲ್ಲಿರುವ ಎಲ್ಲಾ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಬೇಕು. ಇಲ್ಲವಾದಲ್ಲಿ ಬಿಜೆಪಿ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಮನವಿ ಸ್ವೀಕರಿಸಿದ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ. ಸೌದಾಗರ ಮಾತನಾಡಿ, ಮನವಿಯಲ್ಲಿರುವ ಬೇಡಿಕೆಗಳನ್ನು ಪರಿಶೀಲಿಸಿ ಸಾಧ್ಯವಾದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುದ್ದೇಬಿಹಾಳ ತಹಶೀಲ್ದಾರ ಕಿರ್ತಿ ಚಾಲಕ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಶಾಂತ ಸಿ., ಬಿಜೆಪಿ ಮುಖಂಡರಾದ ಎಂ.ಬಿ. ಅಂಗಡಿ,ಖಾಜಾಹುಸೇನ ಎತ್ತಿಮನಿ, ಶಶಿಧರ ಬಂಗಾರಿ ಸಂಗಣ್ಣ ಕುಳಗೇರಿ, ಸಂಗಮೇಶ ಮೇಟಿ, ಹಾಗೂ ಹಣಮಂತ ಚಲವಾದಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು
