ಬಳ್ಳಾರಿ :09: ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಧೃಢ ಸಂಕಲ್ಪ ಮಾಡಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ತಮ್ಮ ಪಾತ್ರವನ್ನು ಜವಬ್ದಾರಿಯಿಂದ ನಿರ್ವಹಿಸಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ತರಬೇತುದಾರರಾದ ವೆಂಕಟೇಶ್ ರವರು ತಿಳಿಸಿದ್ದಾರೆ.
ಶ್ರೀ ವಾಸವಿ ವಿದ್ಯಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಜನ ಜಾಗೃತಿ ವೇದಿಕೆ ಹಾಗೂ ಶಾಲೆಯ ಸಹಯೋಗದಲ್ಲಿ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಉತ್ತಮ ವ್ಯಕ್ತಿತ್ವವನ್ನು ಬೆಳಸಿಕೊಳ್ಳಬೇಕು ಎಂದು ಮುಖ್ಯ ಅತಿಥಿಗಳಾಗಿ ಕರೆ ನೀಡಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ವೀರೇಶ್.ಯು ರವರು ಮಾತನಾಡಿ,”ಶಾಲೆಯ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ,ನೈತಿಕ ಮೌಲ್ಯಗಳು ಹಾಗೂ ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವ ಪವಿತ್ರ ತಾಣವಾಗಿದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಗುರಿಯನ್ನು ಹೊಂದಿ, ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನ ಶೈಲಿಯನ್ನು ಆಳವಡಿಸಿಕೊಳ್ಳಬೇಕು. ಪೋಷಕರು,ಶಿಕ್ಷಕರು ಮತ್ತು ಸಮಾಜದ ಸಹಕಾರದಿಂದ ಮಾತ್ರ ಡ್ರಗ್ಸ್ ಮುಕ್ತ ಸಮಾಜವನ್ನು ನಿರ್ಮಿಸಲು ಸಾಧ್ಯ.ಇಂದಿನ ಜಾಗೃತಿ ಕಾರ್ಯಕ್ರಮದ ಸಂದೇಶವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಕುಟುಂಬ ಹಾಗೂ ಸಮಾಜಕ್ಕೂ ತಲುಪಿಸಬೇಕು ಎಂದು ಕರೆ ನೀಡಿದರು.
ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್ ನ ಅಧ್ಯಕ್ಷರಾದ ವಿಟ್ಟ ಕೃಷ್ಣಕುಮಾರ್, ಕಾರ್ಯದರ್ಶಿಗಳಾದ ಪಿ.ಎನ್.ಸುರೇಶ್,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಮೇಲ್ವಿಚಾರಕರಾದ ಶ್ರೀಮತಿ ರತ್ನ,ಸೇವಾ ಪ್ರತಿನಿಧಿಗಳಾದ ಗೌಸಿಯಾ ಬೇಗಂ, ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ರೂಪ, ಶಾಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯಾದ ಕು.ಹರಣಿ ಪ್ರಾರ್ಥನಾ ಗೀತೆಯನ್ನು ಸಲ್ಲಿಸಿದರು. ಶಿಕ್ಷಕಿಯಾದ ಬಸವರಾಜೇಶ್ವರಿ ಜೆ.ಎಸ್. ಕಾರ್ಯಕ್ರಮವನ್ನು ನಿರ್ವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ, ಆರೋಗ್ಯಕರ , ಶಿಸ್ತಿನ ಹಾಗೂ ಜವಾಬ್ದಾರಿಯುತ ಜೀವನ ನಡೆಸುವ ಸಂದೇಶವನ್ನು ಯಶಸ್ವಿಯಾಗಿ ಸಾರಿತು.
