ಬಳ್ಳಾರಿ: ತುಂಗಭದ್ರ ಜಲಾಶಯದಲ್ಲಿ ವರ್ಷದಿಂದ ವರ್ಷಕ್ಕೆ ಹೂಳು ಸಂಗ್ರಹವಾಗುತ್ತಿರುವುದರಿಂದ ನೀರು ಸಂಗ್ರಹ ಸಾಮರ್ಥ್ಯ ಕುಸಿಯುತ್ತಿದೆ. ಜಲಾಶಯದ ಹೂಳು ತೆರವುಗೊಳಿಸುವ ಕುರಿತು ಸರ್ಕಾರಗಳ ಗಮನ ಸೆಳೆಯುವ ಉದ್ದೇಶದಿಂದ ತುಂಗಭದ್ರ ರೈತ ಸಂಘವು ಜೂನ್ 2ರಂದು ಸಾಂಕೇತಿಕ ಹೂಳು ತೆರವು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸಂಘದ ಅಧ್ಯಕ್ಷ ದರೂರು ಪುರುಷೋತ್ತಮಗೌಡ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಲಾಶಯದ ಹೂಳು ತೆರವುಗೊಳಿಸುವಂತೆ ಹಲವು ವರ್ಷಗಳಿಂದ ಸರ್ಕಾರಗಳನ್ನು ಒತ್ತಾಯಿಸಲಾಗುತ್ತಿದೆ. 2017ರಲ್ಲಿ ರೈತ ಸಂಘದ ನೇತೃತ್ವದಲ್ಲಿ 31 ದಿನಗಳ ಕಾಲ ಹೂಳು ತೆರವು ಜಾತ್ರೆ ನಡೆಸಲಾಗಿತ್ತು. ದಾನಿಗಳ ಸಹಕಾರದಿಂದ ಸುಮಾರು ₹31 ಲಕ್ಷ ವೆಚ್ಚ ಮಾಡಿ ಕಾರ್ಯ ಕೈಗೊಳ್ಳಲಾಗಿತ್ತು. ಆದರೂ ಸರ್ಕಾರದ ಮಟ್ಟದಲ್ಲಿ ಸಮಗ್ರ ಹೂಳು ತೆರವಿಗೆ ಅಗತ್ಯ ಕ್ರಮಗಳು ಕೈಗೊಳ್ಳಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸರ್ಕಾರವನ್ನು ಎಚ್ಚರಿಸುವ ಉದ್ದೇಶದಿಂದ 105 ಟ್ರ್ಯಾಕ್ಟರ್ಗಳ ಮೂಲಕ ಸಾಂಕೇತಿಕ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಜೂನ್ 1ರಂದು ದರೂರು ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಟ್ರ್ಯಾಕ್ಟರ್ಗಳ ಮೆರವಣಿಗೆ ತುಂಗಭದ್ರ ಜಲಾಶಯದತ್ತ ತೆರಳಲಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪ್ರತಿ ಟ್ರ್ಯಾಕ್ಟರ್ಗೆ ₹3 ಸಾವಿರ ಡೀಸೆಲ್ ವೆಚ್ಚವನ್ನು ಸಂಘವೇ ಭರಿಸಲಿದೆ ಎಂದರು.
ಜೂನ್ 2ರಂದು ಜಲಾಶಯದ ಹಿಂಭಾಗದಲ್ಲಿರುವ ಗೂಂಡಾ ಫಾರೆಸ್ಟ್ ಗೆಸ್ಟ್ ಹೌಸ್ ಸಮೀಪ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಹೂಳು ತೆರವು ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಬಳಿಕ ಎರಡು ಜೆಸಿಬಿಗಳ ನೆರವಿನಿಂದ ಜಲಾಶಯದ ಹೂಳನ್ನು ಟ್ರ್ಯಾಕ್ಟರ್ಗಳಲ್ಲಿ ತುಂಬಿ ಸಾಂಕೇತಿಕವಾಗಿ ಹೊರತೆಗೆಯುವ ಕಾರ್ಯ ನಡೆಯಲಿದೆ ಎಂದು ವಿವರಿಸಿದರು.
“ಈ ಕಾರ್ಯಕ್ರಮದ ಮೂಲಕ ಸರ್ಕಾರಗಳು ಎಚ್ಚೆತ್ತುಕೊಂಡು ತುಂಗಭದ್ರ ಜಲಾಶಯದ ಸಮಗ್ರ ಹೂಳು ತೆರವಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು. ಜಲಾಶಯದ ಸಂಗ್ರಹ ಸಾಮರ್ಥ್ಯ ಹೆಚ್ಚಿಸುವುದು ರೈತರ ಹಿತದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದೆ” ಎಂದು ಅವರು ಒತ್ತಾಯಿಸಿದರು.
