ನಾಡಿನಲ್ಲೆಡೆ ಚಾಂದ್ರಮಾನ ಪದ್ಧತಿಯಂತೆ ಅಷ್ಟಮಿ ಹಬ್ಬವನ್ನು ಆಚರಿಸಿದರೆ, ಉಡುಪಿಯಲ್ಲಿ ಸೌರಮಾನ ಪದ್ಧತಿಯನ್ನು ಅನುಸರಿಸಲಾಗುತ್ತದೆ. ಹುಣ್ಣಿಮೆ- ಅಮಾವಾಸ್ಯೆಯ ಗಣನೆಯಲ್ಲಿ ಇತರ ಭಾಗದಲ್ಲಿ ಆಚರಣೆ ನಡೆದರೆ, ತುಳುನಾಡ ಕರಾವಳಿಯಲ್ಲಿ ಸಂಕ್ರಮಣ ವಿಶೇಷ. ಹಾಗಾಗಿ ಈ ಬಾರಿ ಅಷ್ಟಮಿ ತಿಥಿಯ ಜೊತೆ ರೋಹಿಣಿ ನಕ್ಷತ್ರ ಸನ್ನಿಹಿತವಾಗಿರುವ, ಸೆಪ್ಟೆಂಬರ್ 14ರಂದು ಅಷ್ಟಮಿ ಆಚರಿಸಲಾಗುತ್ತಿದೆ. ಇದನ್ನು ಶ್ರೀಕೃಷ್ಣ ಜಯಂತಿ ಎಂದು ಕರೆಯಲಾಗುತ್ತದೆ. ಹಾಗಾಗಿಯೇ ಕೃಷ್ಣ ಊರಿನಲ್ಲಿ ಇಂದು ಅಷ್ಟಮಿಯ ಸಂಭ್ರಮವಿಲ್ಲ.
ಇಂದು ಚಂದ್ರಮಾನ ಪದ್ಧತಿಯಂತೆ ಹಬ್ಬ ಆಚರಿಸುವವರಿಗೂ ಕೃಷ್ಣ ಮಠ ಅವಕಾಶ ಕಲ್ಪಿಸಿದೆ. ಸಾಂಕೇತಿಕವಾಗಿ ಇಂದು ಕೂಡ ಅರ್ಗ್ಯ ಪ್ರಧಾನ ಅವಕಾಶ ಇದೆ. ಆದರೆ ಅಷ್ಟಮಿ ವೈಭವ ಮಾತ್ರ ಇಲ್ಲ. ಬಂದ ಭಕ್ತರು ಶ್ರೀ ಕೃಷ್ಣ ದರ್ಶನ ಮಾಡಿದರು. ಆದರೆ ರಥಬೀದಿ ತುಂಬ ಕಾಣುವ ಬಾಲಕೃಷ್ಣ, ಮೊಸರು ಕುಡಿಕೆ ಸಂಭ್ರಮ, ಕೃಷ್ಣ ಉತ್ಸವ ಎಲ್ಲವೂ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯುತ್ತೆ.