ವಿಜಯಪುರ, ಮೇ.೧೪ : ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಇದೇ ಮೊದಲ ಬಾರಿಗೆ ನಗರದ ಐತಿಹಾಸಿಕ ಮಣ್ಣಿನಲ್ಲಿ ಯೋನೆಕ್ಸ್ ಸನ್ ರೈಸ್ (ಙoಟಿex-Suಟಿಡಿise) ಕರ್ನಾಟಕ ರಾಜ್ಯ ಮಟ್ಟದ (U-೧೫ & U-೧೭) ಬ್ಯಾಡ್ಮಿಂಟನ್ ಪಂದ್ಯಾವಳಿ ಮೇ.೧೭ ರಿಂದ ೨೩ರವರೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದಕ್ಕೆಂದೇ ಗುಮ್ಮಟ ನಗರಿ ಸಜ್ಜಾಗುತ್ತಿದೆ.
ರಾಜ್ಯದ ವಿವಿಧ ಮೂಲೆಗಳಿಂದ ನೂರಾರು ಉದಯೋನ್ಮುಖ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಮೇ.೧೭ ರಂದು ಬೆಳಿಗ್ಗೆ ೧೧ ಗಂಟೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ ಪಂದ್ಯಾವಳಿ ಉದ್ಘಾಟಿಸುವರು. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಯಾಗಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಕುಮಾರ್ ಬಂಗಾರಪ್ಪ ಆಗಮಿಸುವರು. ವಿಶೇಷ ಆಹ್ವಾನಿತರಾಗಿ ಸಚಿವರಾದ ಶಿವಾನಂದ ಎಸ್. ಪಾಟೀಲ್, ಸಂಸದರಾದ ಶ್ರೀ ರಮೇಶ ಜಿಗಜಿಣಗಿ, ಡಾ. ಸುಧಾ ಮೂರ್ತಿ, ಹಾಗೂ ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಜನಪ್ರತಿನಿಧಿಗಳು ಪಾಲ್ಗೊಳ್ಳುವರು. ಆಡಳಿತಾತ್ಮಕವಾಗಿ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ., ಜಿಪಂ ಸಿಇಒ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹಾಗೂ ಬಿಎಲ್ಡಿಇ ಸಂಸ್ಥೆಯ ಗಣ್ಯರು ಭಾಗವಹಿಸಲಿದ್ದಾರೆ ಎಂದು ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
