ಬೆಂಗಳೂರು, ಜೂನ್ 27: ಬಾಕಿ ಇರುವ ಆರೇಳು ರಾಜ್ಯ ಘಟಕಗಳ ಜೊತೆಯಲ್ಲೇ ಕರ್ನಾಟಕ ಬಿಜೆಪಿ
ಅಧ್ಯಕ್ಷರ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡುವುದು ಖಚಿತವಾಗಿದೆ. ಯಾವಾಗ ಮತ್ತು ಯಾರು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲವಾದರೂ ಜುಲೈ ಎರಡನೇ ವಾರದೊಳಗೆ ಈ ಪ್ರಕ್ರಿಯೆ ಮುಗಿಯುವುದು ನಿಚ್ಚಳವಾಗಿದೆ. ಈ ಮಧ್ಯೆ ರಾಜ್ಯಾಧ್ಯಕ್ಷ ಸ್ಥಾನದ ಕುರಿತಾಗಿ ಕಳೆದ ಆರು ತಿಂಗಳಿನಿಂದ ಕೆಲವು ಗಂಭೀರ ಬೆಳವಣಿಗೆಗಳು ನಡೆದಿರುವ ಬಗ್ಗೆ ಕುತೂಹಲಕರ ಮಾಹಿತಿಗಳು ಹೊರಬಿದ್ದಿವೆ. ಬಿಜೆಪಿಯಲ್ಲಿ ಆಗಾಗ ಸಕ್ರಿಯವಾಗಿರುವ ತಟಸ್ಥ ಬಣ ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೇರಿಸುವ ನಿಟ್ಟಿನಲ್ಲಿ ತೀವ್ರ ಪ್ರಯತ್ನವನ್ನೂ ನಡೆಸಿತ್ತು. ಕೇಂದ್ರ ಸಚಿವ ಸ್ಥಾನದ ಜೊತೆಗೆ ಅಧ್ಯಕ್ಷ ಸ್ಥಾನ ಎಂದಾದರೆ ಒಪ್ಪಿಕೊಳ್ಳಬಹುದು ಎಂಬ ಮನಸ್ಥಿತಿಗೂ ಸೋಮಣ್ಣ ತಲುಪಿದ್ದರು. ಆದರೆ, ಅವರಿಗೆ ಕೇಂದ್ರ ಸಚಿವರಾಗಿಯೇ ಒಳ್ಳೆಯ ಕೆಲಸ ಮಾಡುವಂತೆ ಹೈಕಮಾಂಡ್ ಸೂಚಿಸಿದ ಕಾರಣ ಆ ಪ್ರಸ್ತಾಪ ಅಲ್ಲಿಗೆ ಕೊನೆಗೊಂಡಂತಾಗಿದೆ.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿವೈ ವಿಜಯೇಂದ್ರ ಬದಲಾಗಿ ಬೇರೆಯವರನ್ನು ನೇಮಿಸಲು ಹೈಕಮಾಂಡ್ ಆರು ತಿಂಗಳ ಹಿಂದೆ ಗಂಭೀರ ಚಿಂತನೆ ನಡೆಸಿತ್ತು ಎಂಬ ಮಾಹಿತಿಯೂ ಈಗ ಲಭ್ಯವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ಮಾಡಿದ್ದ ಮಾಜಿ ಮುಖ್ಯಮಂತ್ರಿಯೊಬ್ಬರು ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದಾರೆ. ವಿಜಯೇಂದ್ರ ಹೆಸರಿಗೆ ಪರ್ಯಾಯವಾಗಿ ಹಿಂದುಳಿದ ವರ್ಗಗಳ ಕೋಟಾದಲ್ಲಿ ವಿ. ಸುನೀಲ್ ಕುಮಾರ್, ಲಿಂಗಾಯತ ಮತ್ತು ಪಂಚಮಸಾಲಿ ಕೋಟಾದಲ್ಲಿ ಅರವಿಂದ ಬೆಲ್ಲದ್ ಮತ್ತು ದಲಿತ ಕೋಟಾದಲ್ಲಿ ಅರವಿಂದ ಲಿಂಬಾವಳಿ ಅವನ್ನು ಪರಿಗಣಿಸಬಹುದು ಎಂಬ ಅಭಿಪ್ರಾಯವನ್ನೂ ಹೈಕಮಾಂಡ್ ಹೊಂದಿದೆ ಎಂಬುದನ್ನು ನಡ್ಡಾರನ್ನು ಭೇಟಿ ಮಾಡಿದ್ದ ಮಾಜಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಸ್ವತಃ ಸುನೀಲ್ ಕುಮಾರ್ ಜೊತೆಗೇ ವರಿಷ್ಠರು ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಚರ್ಚಿಸಿದ್ದರು. ಆದರೆ, ಆಗ ಸುನೀಲ್ ಕುಮಾರ್ ಕಡೆಯಿಂದ ಸ್ಪಷ್ಟ ನಿಲುವು ವ್ಯಕ್ತವಾಗಿರಲಿಲ್ಲ ಎಂದೂ ಅವರು ತಿಳಿಸಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.