ಬಾಗಲಕೋಟೆ, ಜುಲೈ ೦೪ : ಜಿಲ್ಲೆಯ ಹುನಗುಂದ, ಇಲಕಲ್ಲ ಹಾಗೂ ಅಮೀನಗಡ ಪಟ್ಟಣದ ಮನೆ ಮನೆಗೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಶನಿವಾರ ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದರು.
ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ಮತದಾರರಿಗೆ ಎನ್ಯೂಮಿನೇಷನ್ ಫಾರಂ ವಿತರಿಸುತ್ತಿರುವುದು, ಅಗತ್ಯ ಮಾಹಿತಿಯನ್ನು ಸಂಗ್ರಹಿಸುತ್ತಿರುವುದು ಹಾಗೂ ದಾಖಲೆಗಳ ಪರಿಶೀಲನೆ ನಡೆಸುತ್ತಿರುವ ವಿಧಾನವನ್ನು ಅವಲೋಕಿಸಿದರು. ಮತದಾರರಿಗೆ ಎಸ್.ಐ.ಆರ್ ಕುರಿತು ಸಮರ್ಪಕ ಮಾಹಿತಿ ನೀಡಿ ಅರ್ಹ ಪ್ರತಿಯೊಬ್ಬ ಮತದಾರರ ವಿವರಗಳನ್ನು ನಿಖರವಾಗಿ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದ ಹಿನ್ನಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರಿಗೆ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಎಸ್.ಐ.ಆರ್ ಕಾರ್ಯಕ್ಕೆ ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
ಹುನಗುಂದಲ್ಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಕಲ್ಪಿಸಲಾಗುತ್ತಿರುವ ಮೂಲಸೌಕರ್ಯ ಹಾಗೂ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಪೂರೈಕೆ, ಸ್ವಚ್ಛತೆ, ಆರೋಗ್ಯ ಮತ್ತು ಅಗತ್ಯ ಮೂಲಸೌಕರ್ಯಗಳ ನಿರ್ವಹಣೆಗೆ ವಿಶೇಷ ಗಮನ ಹರಿಸಬೇಕು. ಲೋಪ ಕಂಡುಬಂದಲ್ಲಿ ಕೂಡಲೇ ಸರಿಪಡಿಸುವ ಕೆಲಸವಾಗಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಹುನಗುಂದ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಕಚೇರಿ ಕಾರ್ಯವೈಖರಿ, ಸಾರ್ವಜನಿಕ ಸೇವೆಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಿದರು. ಕಂದಾಯ ಇಲಾಖೆಯ ವಿವಿಧ ದಾಖಲೆಗಳು, ಅರ್ಜಿಗಳ ವಿಲೇವಾರಿ, ಪಹಣಿ, ಇ-ಖಾತೆ, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳ ವಿತರಣೆಯ ಪ್ರಗತಿ ಹಾಗೂ ದೂರುಗಳ ನಿರ್ವಹಣೆ ಸೇರಿದಂತೆ ಸಾರ್ವಜನಿಕರ ಸೇವೆಗಳ ಕುರಿತು ಮಾಹಿತಿಯನ್ನು ಪಡೆದುಕೊಂಡರು.
ಸಾರ್ವಜನಿಕರು ಕಚೇರಿಗೆ ಬಂದಾಗ ಯಾವುದೇ ತೊಂದರೆಯಾಗದಂತೆ ಸುಗಮ ಸೇವೆ ಒದಗಿಸುವದರ ಜೊತೆಗೆ ಅವರೊಂದಿಗೆ ಸೌಜನ್ಯದಿಂದ ವರ್ತಿಸಿ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಮೂಲಕ ಜನಸ್ನೇಹಿ ಆಡಳಿತ ನೀಡಬೇಕು ಎಂದರು. ಭೇಟಿ ವೇಳೆಯಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಇಲಕಲ್ಲ ತಹಶೀಲ್ದಾರ ಅಮರೇಶ ಪಮ್ಮಾರ, ಹುನಗುಂದ ಗ್ರೇಡ್-೨ ತಹಶೀಲ್ದಾರ ಮಹೇಶ ಸಂದಿಗವಾಡ, ಭೂತ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ಸೇರಿದಂತೆ ಇತರರು ಉಪಸ್ಥಿತರಿದ್ದರು
