ಧಾರವಾಡ,: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಧಾರವಾಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಶ್ರೀಮತಿ ಆರ್. ಸ್ನೇಹಲ್ ಅವರು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಸರ್ಕಾರಿ ನೌಕರರು ಸದೃಢ ಆರೋಗ್ಯ ಹೊಂದಿದ್ದಾಗ ಮಾತ್ರ ಸಾರ್ವಜನಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ನೌಕರರ ಆರೋಗ್ಯ ಮತ್ತು ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಹೇಳಿದರು.
ಯೋಜನೆಯ ಸೌಲಭ್ಯಗಳು ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ಸಮರ್ಪಕವಾಗಿ ದೊರೆಯುವಂತೆ ಜಿಲ್ಲೆಯ ಎಲ್ಲಾ ಪ್ರಮುಖ ಆಸ್ಪತ್ರೆಗಳು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ನೋಂದಾಯಿಸಿಕೊಂಡು ಆರೋಗ್ಯ ಸೇವೆ ಒದಗಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಅದೇ ರೀತಿ, ಯೋಜನೆಯಡಿ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಆಗಮಿಸುವ ಯಾವುದೇ ಸರ್ಕಾರಿ ನೌಕರರಿಂದ ಚಿಕಿತ್ಸಾ ವೆಚ್ಚವನ್ನು ವಸೂಲಿ ಮಾಡದೆ, ಯೋಜನೆಯ ನಿಯಮಾನುಸಾರ ಉಚಿತ ಆರೋಗ್ಯ ಸೇವೆ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನೋಂದಾಯಿತ ಆಸ್ಪತ್ರೆಗಳ ಪ್ರತಿನಿಧಿಗಳಿಗೆ ಸೂಚನೆ ನೀಡಿದರು.
ಬೆಂಗಳೂರಿನಿಂದ ಆಗಮಿಸಿದ್ದ ಆರೋಗ್ಯ ಸುರಕ್ಷಾ ಟ್ರಸ್ಟ್ನ ಅಧಿಕಾರಿಗಳಾದ ಡಾ. ಸಿದ್ಧನಗೌಡ ಪಾಟೀಲ ಅವರು ಕಾರ್ಯಾಗಾರವನ್ನು ನಡೆಸಿಕೊಟ್ಟರು. ಕಾರ್ಯಾಗಾರದಲ್ಲಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರಿಗೆ ದೊರೆಯುವ ಆರೋಗ್ಯ ಸೇವೆಗಳು, ಆಸ್ಪತ್ರೆಗಳ ನೋಂದಣಿ ಪ್ರಕ್ರಿಯೆ, ಯೋಜನೆಯ ಅನುಷ್ಠಾನ ವಿಧಾನ ಹಾಗೂ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಎದುರಾಗಬಹುದಾದ ಸಮಸ್ಯೆಗಳ ಕುರಿತು ಸಮಗ್ರವಾಗಿ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಎಸ್. ಎಫ್. ಸಿದ್ಧನಗೌಡರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪರಶುರಾಮ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಸಂಗಮೇಶ ಗಾಬಿ, ಕ್ಯಾಶ್ ನೋಡಲ್ ಅಧಿಕಾರಿ ಕಳಸೂರಮಠ, ಐಎಂಎ ಅಧ್ಯಕ್ಷರಾದ ಡಾ. ಜಗದೀಶ ನೀರಡಿ, ಬಸವರಾಜ ಸಜ್ಜನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ಪ್ರಕಾಶ ಹಳಪೇಟ, ಮಲ್ಲಿಕಾರ್ಜುನ ಸೊಲಗಿ, ದೇವಿದಾಸ ಶಾಂತಿಕರ, ರಾಜಶೇಖರ ಹೊನ್ನಪ್ಪನವರ, ರಾಜಶೇಖರ ಕೊನರಡ್ಡಿ ಹಾಗೂ ತಾಲೂಕು ಅಧ್ಯಕ್ಷರಾದ ಜಗದೀಶ ವಿರಕ್ತಮಠ ಸೇರಿದಂತೆ ಹಲವರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ಆರೋಗ್ಯ ಇಲಾಖೆ, ನೋಂದಾಯಿತ ಆಸ್ಪತ್ರೆಗಳು ಹಾಗೂ ಸರ್ಕಾರಿ ನೌಕರರ ಸಂಘದ ನಡುವೆ ಉತ್ತಮ ಸಮನ್ವಯ ಅಗತ್ಯವಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಯೋಜನೆಯ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಹಾಗೂ ಪಾರದರ್ಶಕವಾಗಿ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.
ಧಾರವಾಡ ಜಿಲ್ಲೆಯ ಪ್ರಮುಖ ಆಸ್ಪತ್ರೆಗಳಾದ ಎಸ್ಡಿಎಂ ಸತ್ತೂರು ಹಾಗೂ ಕೆಎಲ್ಇ ಗಬ್ಬೂರು ಕ್ರಾಸ್ ಆಸ್ಪತ್ರೆಗಳು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ನೋಂದಾಯಿಸಿಕೊಂಡಿರುವುದು ಧಾರವಾಡ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಜಿಲ್ಲೆಯಲ್ಲಿ ಇನ್ನಷ್ಟು ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೋಂದಾಯಿಸಿಕೊಂಡು ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರಿಗೆ ಗುಣಮಟ್ಟದ ಆರೋಗ್ಯ ಸೇವೆಗಳು ಸುಲಭವಾಗಿ ಮತ್ತು ನಗದು ರಹಿತವಾಗಿ ದೊರೆಯುವಂತಾಗಬೇಕು ಎಂಬ ಆಶಯವನ್ನು ಸಭೆಯಲ್ಲಿ ವ್ಯಕ್ತಪಡಿಸಲಾಯಿತು.
ಕಾರ್ಯಾಗಾರವು ಧಾರವಾಡ ಜಿಲ್ಲೆಯಲ್ಲಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಯಿತು.