ಸರ್ವರಿಗೂ ಸಮಪಾಲು-ಸಮಬಾಳು ಒದಗಿಸಲು ಶರಣರು ತಮ್ಮ ಜೀವನವನ್ನೇ ಮುಡಿಪಾಗಿಟ್ಟರು : ಪಿ.ಗಾದೆಪ್ಪ

Sandeep Malannavar
ಸರ್ವರಿಗೂ ಸಮಪಾಲು-ಸಮಬಾಳು ಒದಗಿಸಲು ಶರಣರು ತಮ್ಮ ಜೀವನವನ್ನೇ ಮುಡಿಪಾಗಿಟ್ಟರು : ಪಿ.ಗಾದೆಪ್ಪ
WhatsApp Group Join Now
Telegram Group Join Now

ಬಳ್ಳಾರಿ,ಫೆ.02: -12 ನೇ ಶತಮಾನ ಕಾಲದ ಎಲ್ಲಾ ಶಿವಶರಣರ ಕಾಯಕ ನಿಷ್ಠೆಗಳು ಮಾದರಿಯಾಗಿದ್ದು, ಅಂತಹ ಶರಣರ ಆದರ್ಶ ಗುಣಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಚನ ಸಾಹಿತ್ಯ ಕಾಲದಲ್ಲಿ ಸರ್ವರಿಗೂ ಸಮಪಾಲು-ಸಮಬಾಳು ಒದಗಿಸಲು ಅನೇಕ ಶರಣರು ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ಅಂತಹವರ ವಿಚಾರಧಾರೆಗಳನ್ನು ಇಂದಿನ ಪೀಳಿಗೆಗೆ ಮನದಟ್ಟು ಮಾಡಲು ನಮ್ಮ ಸರ್ಕಾರ ಜಯಂತಿ ಕಾರ್ಯಕ್ರಮಗಳನ್ನು ಆಚರಿಸುತ್ತಿದೆ ಎಂದು ತಿಳಿಸಿದರು.

ಜಯಂತಿ ಕಾರ್ಯಕ್ರಮ ಆಚರಣೆಗೆ ಹೆಚ್ಚಿನ ಅನುದಾನಕ್ಕಾಗಿ ಮಹಾನಗರ ಪಾಲಿಕೆಯಿಂದ ವಿಶೇಷ ಅನುದಾನ ನೀಡಲಾಗುವುದು. ಈ ಕುರಿತು ಸಂಸದರ, ಶಾಸಕರ, ಪಾಲಿಕೆ ಸದಸ್ಯರ ಜೊತೆಗೂಡಿ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಪ್ರತಿಯೊಂದು ಸಮುದಾಯಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಸಮುದಾಯಗಳು ಒಗ್ಗಟ್ಟಾಗಿ ಶಿಕ್ಷಣ ಪಡೆಯುವುದರ ಮೂಲಕ ಮುಖ್ಯವಾಹಿನಿಗೆ ಬರಬೇಕು ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಭಾರತ ಹುಣ್ಣಿಮೆಯ ದಿನದಂದೇ ಮಡಿವಾಳ ಮಾಚಿದೇವರ ಜಯಂತಿ ಆಚರಿಸುತ್ತಿಸುವುದು ನಮ್ಮೆಲ್ಲರ ಸೌಭಾಗ್ಯ. ಜಾತಿ, ಮತ, ಲಿಂಗ ಭೇದವನ್ನು ತಿರಸ್ಕರಿಸಿದ ಬಸವಣ್ಣನವರ ಸಾಮಾಜಿಕ ಕ್ರಾಂತಿಯಲ್ಲಿ ತೊಡಗಿಸಿಕೊಂಡಿದ್ದವರು ಮಡಿವಾಳ ಮಾಚಿದೇವರು ಒಬ್ಬರಾಗಿದ್ದರು ಎಂದು ಹೇಳಿದರು.

12ನೇ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತೀಯತೆ, ಮೇಲು -ಕೀಳು ತಾರತಮ್ಯ, ಅಸ್ಪೃಶ್ಯತೆ, ಮೂಢ ನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ತುಳಿತಕ್ಕೆ ಒಳಗಾಗಿದ್ದ ಜನರ ಏಳ್ಗೆಗಾಗಿ ಅನೇಕ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು ಎಂದರು.

ಕುರುಗೋಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ತಿಪ್ಪೇರುದ್ರ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, 12ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರಾಗಿದ್ದರು.

ಮೌಢ್ಯಗಳಿಂದ ದೀನರ ಶೋಷಣೆ ನಡೆಯುತ್ತಿದ್ದ ಕಾಲದಲ್ಲಿ ಮಾಚಿದೇವ ಜಾಗೃತಿಯ ಮೂಲಕ ಶೋಷಣೆ ತಡೆಗಟ್ಟಿದರು. 12ನೇ ಶತಮಾನದ ಕಾಲದಲ್ಲಿ ಇಂತಹ ಶರಣರು ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ವಚನಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕ್ರಿ.ಶ.1120 ರಲ್ಲಿ ಬಿಜಾಪುರ ಜಿಲ್ಲೆಯ ಸಿಂಧಗಿ ತಾಲ್ಲೂಕಿನ ದೇವರ ಹಿಪ್ಪರಗಿಯಲ್ಲಿ ತಂದೆ ಪರುವತಯ್ಯ ತಾಯಿ ಸುಜ್ನಾನವ್ವ ದಂಪತಿಗಳ ಮಗನಾಗಿ ಮಡಿವಾಳ ಮಾಚಿದೇವರು ಜನಿಸಿದರು. ವಚನ ಸಾಹಿತ್ಯದ ಹಸ್ತ ಪ್ರತಿಗಳನ್ನು ರಕ್ಷಣೆ ಮಾಡುವ ಜವಾಬ್ದಾರಿಯನ್ನು ಹೊಂದಿದ್ದ ಇವರು, ಬಸವಣ್ಣನವರು ನಿರ್ಮಿಸಿದ್ದ ಅನುಭವ ಮಂಟಪದಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. ಈ ಮೂಲಕ ಸಾಮಾಜಿಕ ಪರಿವರ್ತನೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಬೋಧಿಸಲಾಯಿತು. ಬಳಿಕ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಬಳ್ಳಾರಿಯ ದೊಡ್ಡಯ್ಯ ವಿ.ಕಲ್ಲೂರು ತಂಡ ವಚನ ಸಂಗೀತ ಗಾಯನ ಪ್ರಸ್ತುತಪಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಎನ್.ಧನುಂಜಯ ಹಮಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್, ಮುಖಂಡರಾದ ಪ್ರತಾಪ್ ರೆಡ್ಡಿ, ಅನೂಪ್ ಕುಮಾರ್, ಅಲ್ಲಂ ಪ್ರಶಾಂತ್ ಸೇರಿದಂತೆ ಸಮಾಜದ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article