ನವದೆಹಲಿ, ಮೇ 27: ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ 2ನೇ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ವಿಭಾಗಗಳು ಮತ್ತು ಕ್ಷೇತ್ರಗಳ ಪುರಸ್ಕೃತರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಕರ್ನಾಟಕದ ಖ್ಯಾತ ನಟ ಅನಂತನಾಗ್ ಅವರಿಗೆ ಪದ್ಮಭೂಷಣ, ಕರ್ನಾಟಕದ ವಯಲಿನ್ ವಾದಕ ಎಲ್. ಸುಬ್ರಹ್ಮಣ್ಯಂ ಅವರಿಗೆ ಪದ್ಮವಿಭೂಷಣ, ಕರ್ನಾಟಕ ಮೂಲದ ಸಂಗೀತ ನಿರ್ದೇಶಕ ರಿಕಿ ಕೇಜ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
71 ಗಣ್ಯರಿಗೆ ರಾಷ್ಟ್ರಪತಿಯಿಂದ ಪದ್ಮ ಪ್ರಶಸ್ತಿ ಪ್ರದಾನ

ಇಂದು ನಡೆದ ಪದ್ಮ ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮದಲ್ಲಿ 71 ವ್ಯಕ್ತಿಗಳನ್ನು ಸನ್ಮಾನಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಗಮನಾರ್ಹ ಕೊಡುಗೆ ಮತ್ತು ಕೆಲಸಕ್ಕಾಗಿ 71 ಗಣ್ಯ ವ್ಯಕ್ತಿಗಳಿಗೆ ರಾಷ್ಟ್ರಪತಿಗಳು ಪದ್ಮ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಕರ್, ಕೇಂದ್ರ ಸಚಿವರಾದ ಅಮಿತ್ ಶಾ, ಎಸ್ ಜೈಶಂಕರ್, ಪ್ರಹ್ಲಾದ್ ಜೋಶಿ, ಜಿತೇಂದ್ರ ಸಿಂಗ್, ಜಿ ಕಿಶನ್ ರೆಡ್ಡಿ ಮತ್ತು ಇತರ ಹಲವಾರು ಸಚಿವರು ಮತ್ತು ಗಣ್ಯರು ಉಪಸ್ಥಿತರಿದ್ದರು.