ಚಂಡೀಗಢ, ಅಕ್ಟೋಬರ್ 17: ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಪಂಜಾಬ್ನ ರೋಪರ್ ವಲಯ ಡಿಐಜಿ ಹರ್ಚರಣ್ ಸಿಂಗ್ ಬುಲ್ಲಾರ್ರನ್ನು ಸಿಬಿಐ ಗುರುವಾರ ಬಂಧಿಸಿದೆ. ಅವರ ನಿವಾಸದಿಂದ ಅಪಾರ ಪ್ರಮಾಣದ ನಗದು, ಚಿನ್ನಾಭರಣ, ಕಂತೆ ಕಂತೆ ನೋಟುಗಳು, ವಜ್ರ, ಚಿನ್ನದ ಆಭರಣಗಳು, ಉತ್ಕೃಷ್ಟ ವಾಚ್ಗಳು ಸೇರಿದಂತೆ ಸಂಪತ್ತಿನ ಖಜಾನೆಯನ್ನೇ ವಶಕ್ಕೆ ಪಡೆದುಕೊಂಡಿದೆ. 8 ಲಕ್ಷ ರೂ. ಲಂಚ ಪ್ರಕರಣವೊಂದರಲ್ಲಿ ಅಖಾಡಕ್ಕಿಳಿದ ಸಿಬಿಐ, ಭ್ರಷ್ಟ ಐಪಿಎಸ್ ಅಧಿಕಾರಿಯ ಸಂಪತ್ತಿನ ಖಜಾನೆ ಕಂಡು ನಿಬ್ಬೆರಗಾಗಿದೆ.
ಹರ್ಚರಣ್ ಸಿಂಗ್ ಬುಲ್ಲಾರ್ 2009ರ ಬ್ಯಾಚ್ನ ಐಪಿಎಸ್ ಅಧಿಕಾರಿ. ಪಂಜಾಬ್ನ ರೋಪರ್ ವಲಯದಲ್ಲಿ ಡಿಐಜಿಯಾಗಿದ್ದಾರೆ. 8 ಲಕ್ಷ ರೂಪಾಯಿ ಲಂಚ ಪಡೆದ ಆರೋಪದಲ್ಲಿ ಸಿಬಿಐಗೆ ಬಲೆಗೆಬಿದ್ದಿದ್ದಾರೆ. ಇವರ ಜೊತೆ ಮಧ್ಯವರ್ತಿ ಕೃಷ್ಣ ಎಂಬಾತನನ್ನು ಬಂಧಿಸಲಾಗಿದೆ. ಆಕಾಶ್ ಬಟ್ಟಾ ಎಂಬ ಸ್ಕ್ರ್ಯಾಪ್ ವ್ಯಾಪಾರಿ ವಿರುದ್ಧ ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಮಧ್ಯವರ್ತಿ ಮೂಲಕ ಲಂಚ ಪಡೆಯುವ ವೇಳೆ ಲಾಕ್ ಆಗಿದ್ದಾರೆ. 8 ಲಕ್ಷ ರೂ. ಲಂಚ ಕೊಡದಿದ್ದರೆ ಕ್ರಿಮಿನಲ್ ಕೇಸ್ ಜೊತೆ ಉದ್ಯಮಕ್ಕೆ ತೊಂದರೆ ಎದುರಿಸಬೇಕಾಗುತ್ತದೆ ಎಂದು ಡಿಐಜಿ ಬೆದರಿಸಿದ್ದರು. ಈ ಬಗ್ಗೆ ಉದ್ಯಮಿ ಆಕಾಶ್ ಸಿಬಿಐಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದಲ್ಲಿ ಅಖಾಡಕ್ಕಿಳಿದ ಸಿಬಿಐ ಅಧಿಕಾರಿಗಳು, ಲಂಚ ಪಡೆಯುವ ವೇಳೆ ರೆಡ್ಹ್ಯಾಂಡಾಗಿ ಡಿಐಜಿ ಹರ್ಚರಣ್ರನ್ನು ಬಂಧಿಸಿದೆ.