ವಿಜಯನಗರ(ಹೊಸಪೇಟೆ), : ಗ್ರಾಮೀಣ ಹೆಣ್ಣು ಮಕ್ಕಳು ಹಾಗೂ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಉನ್ನತ ಶಿಕ್ಷಣ ನಿಡುವ ಸದುದ್ದೇಶದಿಂದ ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಲಾಗುತ್ತಿದೆ. ಪ್ರಸುತ್ತ ವರ್ಷದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ರೂ.12 ಕೋಟಿ ಅನುದಾನ ನೀಡಲಾಗಿದೆ ಎಂದು ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿದರು.
ನಗರದ ಪಾಪಿನಾಯಕಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ವತಿಯಿಂದ ಹಾಗೂ ರಾಜ್ಯ ಯೋಜನೆಯಡಿ ಮಂಜೂರಾದ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಯನ್ನು ಉದ್ಘಾಟಿಸಿ ಅವರು ಬುಧವಾರ ಮಾತನಾಡಿದರು.
ಸರ್ಕಾರದ ಈ ಕ್ರಮ ಶಾಲೆಯ ಸುತ್ತಮುತ್ತಲಿನ ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಲಿದೆ. ಪ್ರೌಢಶಾಲೆ ಇಲ್ಲದೇ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸುಮಾರು ಹತ್ತು ಕಿಲೋ ಮೀಟರ್ಗಳ ದೂರ ಸಂಚಾರಿಸಬೇಕಾಗಿತ್ತು. ಇದರಿಂದ ಹಲವಾರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದನ್ನು ಗಮನಿಸಿ ಯಾರು ಸಹ ಶಿಕ್ಷಣದಿಂದ ವಂಚಿರಾಗದಿರಲು ಶಾಲೆಗಳನ್ನು ಉನ್ನತೀಕರಿಸಲಾಗುತ್ತಿದೆ. ಪ್ರತಿಯೊಬ್ಬರೂ ಸಹ ಶಿಕ್ಷಣ ಪಡೆಯುವ ಹಕ್ಕಿದೆ. ಮುಂದಿನ ದಿನಗಳಲ್ಲಿ ಜನರು ಗ್ರಾಮದಲ್ಲಿ ಒಂದು ಸೂಕ್ತ ಸ್ಥಳವನ್ನು ಗುರುತಿಸಿ ಕೊಟ್ಟಲ್ಲಿ ನೂತನ ಪ್ರೌಢಶಾಲೆ ಕಟ್ಟಡ ಹಾಗೂ ಹೊಸ ಕ್ರೀಡಾಂಗಣವನ್ನು ನಿರ್ಮಾಸಲಾಗುತ್ತದೆ. ವಿವಿಧ ಜಿಲ್ಲೆಗಳಿಂದ ಆಗಮಿಸುವ ಕ್ರಿಡಾಪಟುಗಳಿಗೆ ಮೂಲಸೌಲಭ್ಯ ಒದಗಿಸಲು ಮತ್ತು ಜಿಲ್ಲಾ ಕ್ರೀಡಾಂಗಣವನ್ನು ಅಭಿವೃದ್ದಿಪಡಿಸಲು ರೂ. 5 ಕೋಟಿ ಅನುದಾನವನ್ನು ಬಳಕೆಮಾಡಲಾಗುತ್ತಿದೆ. ಪಿ.ಕೆ.ಹಳ್ಳಿ, ನಾಗೇನಹಳ್ಳಿ, ಬಸವನದುರ್ಗ, ಗಾದಿಗನೂರು, ಕಮಲಾಪುರದ ಶಾಲೆಯಲ್ಲಿನ ಕ್ರೀಡಾಂಗಣಗಳನ್ನು ಅಭಿವೃದ್ದಿ ಪಡೆಸಲಾಗುವುದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರ ಹೊರಪೇಟೆ ಮಾತನಾಡಿ, ನಮ್ಮ ಕ್ಷೇತ್ರದಲ್ಲಿ ಮೊದಲ ಭಾರಿ ಎರಡು ಪ್ರೌಢಶಾಲೆಗಳನ್ನು ಉನ್ನತೀಕರಿಸಲಾಗಿದೆ. ಪಾಪಿನಾಯಕಹಳ್ಳಿಯ ಭಾಗದಲ್ಲಿ ಪ್ರೌಢಶಾಲೆಯನ್ನು ಉನ್ನತೀಕರಿಸುವ ಮುಖಾಂತರ ಈ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯವನ್ನು ದೊರಕಿಸಿದಂತಾಗಿದೆ. ಶಾಸಕರು ಹೇಳಿದಂತೆ ಗ್ರಾಮದಲ್ಲಿ ಕೆಪಿಎಸ್ ಶಾಲೆಯನ್ನು ನಿರ್ಮಿಸಿದಲ್ಲಿ ಒಂದನೇ ತರಗತಿಯಿಂದ ಪದವಿ ಪೂರ್ವ ಹಂತದವರೆಗೆ ವಿದ್ಯಾಭ್ಯಾಸ ಮಾಡಲು ಅನುಕೂಲವಾಗಲಿದೆ. ಶಾಸಕರು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕಾಗಿ 2 ವರ್ಷಗಳಲ್ಲಿ ರೂ.68 ಕೋಟಿ ಅನುದಾನ ನೀಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ 328 ಶಾಲೆಗಳ ಕೊಠಡಿಗಳನ್ನು ದುರಸ್ತಿ ಹಾಗೂ 142 ಕ್ಕೂ ಅಧಿಕ ಹೊಸ ಕಟ್ಟಡಗಳು ಮತ್ತು 30 ಹೈಟೆಕ್ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು.
ಈ ವೇಳೆ ಪಿ.ಕೆ.ಹಳ್ಳಿ ಗ್ರಾಪಂ ಅಧ್ಯಕ್ಷೆ ಅಂಕ್ಲಮ್ಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆಲಂ ಭಾಷಾ, ಎಸ್ಡಿಎಮ್ಸಿ ಅಧ್ಯಕ್ಷ ವೀರೇಶ್, ಎಸ್ಡಿಎಮ್ಸಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಶಾಲೆಯ ಶಿಕ್ಷಕರು, ಸೇರಿದಂತೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು
ಗ್ರಾಮೀಣ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆದ್ಯತೆ : ಶಾಸಕ ಹೆಚ್. ಆರ್. ಗವಿಯಪ್ಪ


