ಬಳ್ಳಾರಿ19.: ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಜನಪರ ಸರ್ಕಾರದ 2 ವರ್ಷದ ಸಾಧನೆಗಳನ್ನು ಜನರ ಮುಂದಿಡಲು ಹೊಸಪೇಟೆಯಲ್ಲಿ ಮೇ.20 ರಂದು ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದು, ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲೂ ಅವರು ಮನವಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದ್ದು, ರಾಜ್ಯದ ಜನರಿಗೆ ನೀಡಿದ ಭರವಸೆಯಂತೆ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ನಮ್ಮ ಸರ್ಕಾರದ ಜನಪರ ಯೋಜನೆಗಳು ರಾಜ್ಯದ 7 ಕೋಟಿ ಜನರಲ್ಲಿ ಅರ್ಧ ಜನರಿಗೆ ತಲುಪಿಸಲು ಯಶಸ್ವಿಯಾಗಿದ್ದೇವೆ. ಹೊಸಪೇಟೆಯಲ್ಲಿ ಹಮ್ಮಿಕೊಂಡಿರುವ ಸಾಧನಾ ಸಮಾವೇಶಕ್ಕೆ ಸುಮಾರು 4 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಿ.ಎಂ.ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸೇರಿದಂತೆ ಸಚಿವ ಸಂಪುಟದ ಎಲ್ಲ ಸಚಿವರು, ಶಾಸಕರು, ಮಾಜಿ ಶಾಸಕರು,
ರಾಜ್ಯದ ಪ್ರತಿ ಜಿಲ್ಲೆಯಿಂದಲೂ ನಮ್ಮ ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ಪಡೆದ ಫಲಾನುಭವಿಗಳು ಸೇರಿದಂತೆ ನಮ್ಮ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ನಮ್ಮ ಜಿಲ್ಲೆಯಿಂದ ಸುಮಾರು 80 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದು, ಸಮಾವೇಶದಲ್ಲಿ ಎಲ್ಲರಿಗೂ ಅಚ್ಚುಕಟ್ಟಾದ ಊಟದ ವ್ಯವಸ್ಥೆ, ನೀರಿನ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ ಯನ್ನು ಮಾಡಲಾಗಿದೆ. ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.