೨೦೨೫-೨೬ ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಅಂಗವಾಗಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಐ.ಸಿ.ಎ.ಆರ್-ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಕರ್ನಾಟಕ ರಾಜ್ಯ ಕೃಷಿ ಇಲಾಖೆ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ದಿನಾಂಕ ೨೯-೦೫-೨೦೨೫ ರಿಂದ ೧೨-೦೬-೨೦೨೫ ರ ವರೆಗೆ ಗದಗ ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಕೃಷಿ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
೧೧-೦೬-೨೦೨೫ ರಂದು ಹದಿನಾಲ್ಕನೇಯ ದಿನ ರೋಣ ತಾಲೂಕಿನ ಸೂಡಿ, ಕೊತಬಾಳ, ಅಬ್ಬಿಗೇರಿ, ಹೊಳೆಮಣ್ಣೂರು, ಹೊಳೆಆಲೂರು, ಗಾಡಗೋಳಿ ಗ್ರಾಮಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿತ್ತು. ಗಾಡಗೋಳಿ ಗ್ರಾಮದ ಪ್ರಗತಿಪರ ರೈತರಾದ ಶ್ರೀ ರವಿಗೌಡ ಬೊಮ್ಮನಗೌಡರ ಅವರ ಕೃಷಿಯಲ್ಲಿನ ನಾವೀನ್ಯತೆ ದಾಖಲೆ ಮಾಡಲಾಯಿತು. ಅವರು ಟ್ರ್ಯಾಕ್ಟರ್ ಎಳೆಯುವ ಇಂಟರ್ ಕಲ್ಟಿವೇಟರ್, ಬಹು ಉಪಕರಣ ಜೋಡಣೆಯೊಂದಿಗೆ ಪ್ರೈಮ್ ಮೂವರ್ ನಂತಹ ಸುಧಾರಿತ ಯಾಂತ್ರೀಕೃತ ಯಂತ್ರೋಪಕರಣಗಳನ್ನು ಅಭಿವೃದ್ಧಿಪಡಿಸಿ, ಅಳವಡಿಸಿಕೊಂಡು, ಯಶಸ್ಸು ಕಂಡಿರುವರು.
ಐ.ಸಿ.ಎ.ಆರ್-ರಾಷ್ಟ್ರೀಯ ಪಶು ಪೋಷಣೆ ಹಾಗೂ ಶರೀರಕ್ರಿಯಾ ವಿಜ್ಞಾನ ಸಂಸ್ಥೆ, ಬೆಂಗಳೂರು ಹಾಗೂ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಕೃಷಿ ಅಧಿಕಾರಿಗಳು, ಆತ್ಮ ಸಿಬ್ಬಂದಿ, ಕೃಷಿ ಸಖಿಯರು, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರುಗಳು, ಪಶು ಸಖಿಯರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ರೈತ ಮುಖಂಡರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಈ ಅಭಿಯಾನದಲ್ಲಿ ವಿವಿಧ ತಂತ್ರಜ್ಞಾನಗಳಾದ ಬೀಜೋಪಚಾರ, ಸುಧಾರಿತ ತಳಿಗಳು, ತೋಟಗಾರಿಕೆ ಬೆಳೆಗಳು, ಸಿರಿಧಾನ್ಯ ಹಾಗೂ ಅವುಗಳ ಮಹತ್ವ, ಕೃಷಿ ಯಂತ್ರೋಪಕರಣಗಳು, ಸಮಗ್ರ ಕೃಷಿ ಪದ್ಧತಿಗಳ ತರಬೇತಿ ನೀಡಲಾಯಿತು. ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಮುಂಗಾರು ಹಂಗಾಮಿನ ಅಡಿ ಅಭಿವೃದ್ಧಿ ಪಡಿಸಿದ ಮುಂಗಾರು ಬೆಳೆಗಳಾದ ಹೆಸರು, ಶೇಂಗಾ, ಸೂರ್ಯಕಾಂತಿ, ಗೋವಿನ ಜೋಳ, ಈರುಳ್ಳಿ ಬೆಳೆಗಳ ಕುರಿತ ಕೃಷಿ ಕೈಪಿಡಿಯನ್ನು ರೈತರಿಗೆ ನೀಡಲಾಯಿತು. ಜೊತೆಗೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ವಿವಿಧ ಯೋಜನೆಗಳ ಬಗ್ಗೆ ಹಸ್ತಪ್ರತಿಗಳನ್ನು ವಿತರಿಸಲಾಯಿತು. ರೋಣ ತಾಲೂಕಿನ ೧೩೧೯ ಜನ ರೈತ ಹಾಗೂ ರೈತ ಮಹಿಳೆಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.