ಬಳ್ಳಾರಿ, ಮಾ.18..: ರಾಜ್ಯದ ಪುರೋಹಿತರು, ಅರ್ಚಕರು ಹಾಗೂ ಅಡುಗೆಯವರಿಗೆ ಹೆಚ್ಚಿನ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಕಾರ್ಮಿಕ ಇಲಾಖೆಯ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಪ್ರತ್ಯೇಕ ಮಂಡಳಿ ರಚಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕರ ಫೆಡರೇಷನ್ ವತಿಯಿಂದ ಮನವಿ ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಗೋಪಿನಾಥ ಶರ್ಮಾ ಅವರು, ರಾಜ್ಯದ 31 ಜಿಲ್ಲೆಗಳಲ್ಲಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಸಾವಿರಾರು ಪುರೋಹಿತರು, ಅರ್ಚಕರು ಹಾಗೂ ಅಡುಗೆಯವರು ಸೇರಿದಂತೆ ಅವರ ಕುಟುಂಬ ಸದಸ್ಯರನ್ನು ಸೇರಿಸಿ ಒಟ್ಟು 8 ಲಕ್ಷಕ್ಕೂ ಹೆಚ್ಚು ಜನರು ಇದರ ವ್ಯಾಪ್ತಿಯಲ್ಲಿ ಇದ್ದಾರೆ ಎಂದು ತಿಳಿಸಿದರು. ಇತ್ತೀಚೆಗೆ ಸರ್ಕಾರ ಇವರಿಗೆ ಲೇಬರ್ ಕಾರ್ಡ್ ನೀಡಲು ಕ್ರಮ ಕೈಗೊಂಡಿರುವುದು ಸ್ವಾಗತಾರ್ಹವಾದರೂ, ಇನ್ನಷ್ಟು ಅನುದಾನ ಮತ್ತು ಸೌಲಭ್ಯಗಳು ಸಿಗಲು ಪ್ರತ್ಯೇಕ ಮಂಡಳಿ ರಚನೆ ಅಗತ್ಯವಿದೆ ಎಂದು ಹೇಳಿದರು.
ಪ್ರತ್ಯೇಕ ಮಂಡಳಿ ರಚನೆಯಾದರೆ ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಸಂಸ್ಥೆಯ ರಾಜ್ಯಾಧ್ಯಕ್ಷರಾದ ಡಾ. ಜೆ. ಶ್ರೀನಿವಾಸ ಮೂರ್ತಿಯನ್ನು ಮಂಡಳಿಯ ಅಧ್ಯಕ್ಷರಾಗಿ ಹಾಗೂ ಸತೀಶ್ ಸಿಂಹ ಹೆಚ್.ಎಸ್. ಅವರನ್ನು ಉಪಾಧ್ಯಕ್ಷರಾಗಿ ನೇಮಕ ಮಾಡುವಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಕಚೇರಿ ಕಾರ್ಯದರ್ಶಿ ಮಂಜುನಾಥ ಭಟ್, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ರಾವ್, ಜಿಲ್ಲಾ ಕಾರ್ಯದರ್ಶಿ ಗುರುರಾಜ, ಜಿಲ್ಲಾ ಉಪ ಖಜಾಂಚಿ ನರಸಿಂಹ ರಾವ್, ಜಿಲ್ಲಾ ಉಪ ನಿರ್ದೇಶಕ ಮುಕುಂದ ರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


