ಬೆಂಗಳೂರು: ಕನ್ನಡದ ರಂಗಭೂಮಿ ಹಾಗೂ ಚಿತ್ರರಂಗಕ್ಕೆ ಒಂದು ದೊಡ್ಡ ಆಘಾತ ಎದುರಾಗಿದೆ. ರಾಜ್ಯದ ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು (ಸೆಪ್ಟೆಂಬರ್ 29) ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಅವರ ಸಾವು ಸಾಕಷ್ಟು ದುಃಖ ತಂದಿದೆ. ಅವರಿಗೆ ತೀವ್ರ ಹೃದಯಾಘಾತ ಉಂಟಾಯಿತು ಎಂದು ತಿಳಿದು ಬಂದಿದೆ.
ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ‘ಖ್ಯಾತ ಕನ್ನಡ ರಂಗಭೂಮಿ ನಟ, ರಾಜ್ಯಾದ್ಯಂತ ಅನೇಕ ನಾಟಕಗಳಲ್ಲಿ ನಟಿಸಿ-ನಿರ್ದೇಶಿಸಿ ಅತ್ಯಂತ ಜನಪ್ರೀಯ ನಾಟಕಕಾರರಾಗಿದ್ದ ನಮ್ಮ ಹುಬ್ಬಳ್ಳಿಯ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಿಗ್ಗೆ ನಿಧನರಾದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ. ಅವರ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಇವರು ಪಾತ್ರವಹಿಸುತ್ತಿದ್ದರು’ ಎಂದು ಅವರು ಬರೆದುಕೊಂಡಿದ್ದಾರೆ.


